ಜೈಪುರ/ಭೋಪಾಲ್/ರಾಯಪುರ: ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಯೇರಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ರಾಜ್ಯಗಳಲ್ಲಿ ನೂತನ ಮುಖ್ಯಮಂತ್ರಿಗಳು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ದೇವೇಗೌಡ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಿದ್ದರು.
ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ೧೦೦ ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿದೆ. ಆ ಮೂಲಕ ಪ್ರತಿ ಬಾರಿಯೂ ಎರಡು ರಾಷ್ಟ್ರೀಯ ಪಕ್ಷಗಳನ್ನೇ ಪರ್ಯಾಯವಾಗಿ ಅಧಿಕಾರಕ್ಕೇರಿಸುವ ರಾಜಸ್ಥಾನದ ಪರಂಪರೆ ಮುಂದುವರಿದಿದೆ.
ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಾಲ್ಗೊಂಡಿದ್ದರು. ಪ್ರಮಾಣವಚನ ಸ್ವೀಕಾರ ಮುಗಿದ ಬಳಿಕ ರಾಹುಲ್ ಗಾಂಧಿ ಟ್ವಿಟರ್ ಮೂಲಕ ರಾಜಸ್ಥಾನದ ಜನತೆಗೆ ಕೃತಜ್ಞತೆ ಸಲ್ಲಿಸಿದರು.