ಬೆಂಗಳೂರು, ಜ. 21: ಕನಿಷ್ಠ ವೇತನ ಜಾರಿ, ಕೆಲಸದ ಭದ್ರತೆ, ಬಿಸಿಯೂಟ ಪೂರೈಕೆಯನ್ನು ಖಾಸಗಿ ಸಂಸ್ಥೆಗಳಿಗೆ ನೀಡಬಾರದು, ತಮ್ಮನ್ನು ಕಾರ್ಮಿಕ ಕಾಯ್ದೆಯಡಿ ಸೇರಿಸಬೇಕೆಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ವತಿಯಿಂದ ಎರಡು ದಿನಗಳ ಕಾಲ ಹೋರಾಟ ಕೈಗೊಳ್ಳಲಾಗಿದೆ.
ಹೌದು, ಬಿಸಿಯೂಟ ಕಾರ್ಯಕರ್ತರು ಬೆಂಗಳೂರಿನಲ್ಲಿ ಇಂದಿನಿಂದ 2 ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಂಡಿದ್ದು, ಎರಡು ದಿನ ಶಾಲೆಗಳಲ್ಲಿ ಬಿಸಿಯೂಟ ತಯಾರಸದೇ ಇರಲು ನಿರ್ಧರಿಸಿದ್ದಾರೆ. ಹೀಗಾಗಿ ಶಾಲಾ ಮಕ್ಕಳಿಗೆ 2 ದಿನ ಬಿಸಿಯೂಟ ಇರುವುದಿಲ್ಲ.
ಈಗಾಗಲೇ ನಗರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಬಿಸಿಯೂಟ ಕಾರ್ಯಕರ್ತೆಯರು ರಾಜ್ಯದ ವಿವಿಧ ಜಿಲ್ಲೆಯಿಂದ ಆಗಮಿಸಿದ್ದು, ಇನ್ನೇನು ಕೆಲವೇ ಕ್ಷಣದಲ್ಲಿ ಸ್ವಾತಂತ್ರ್ಯ ಉದ್ಯಾನದ ಕಡೆಗೆ ತೆರಳಲಿದ್ದಾರೆ. ಕನಿಷ್ಠವೇತನ, ಕೆಲಸದ ಭದ್ರತೆ, ಪ್ರತಿ ತಿಂಗಳು 5ನೇ ತಾರೀಖು ಸಂಬಂಳ ನೀಡುವುದು, ಸಂಬಂಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ. ರಾಜ್ಯದಲ್ಲಿ 1 ಲಕ್ಷ ಹದಿನೆಂಟು ಸಾವಿರ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ.