ಮಂಗಳೂರು: ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಸೌಲಭ್ಯವನ್ನು ಕ್ರೀಡಾಪಟುಗಳಿಗೆ ಒದಗಿಸಲು ಪ್ರಥಮ ಹಂತದಲ್ಲಿ ರಾಜ್ಯದಲ್ಲಿ ನಾಲ್ಕು ವಿಭಾಗೀಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯ ಕ್ರೀಡಾ ಸಚಿವ ರಹೀಮ್ ಖಾನ್ ತಿಳಿಸಿದ್ದಾರೆ.
ಇಂದು ನಗರಕ್ಕೆ ಆಗಮಿಸಿರುವ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಾದ ಒಲಿಂಪಿಕ್ ಹಾಗೂ ಇತರ ಕ್ರೀಡಾ ಕೂಟಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕ್ರೀಡಾಳುಗಳಿಗೆ ಅಭ್ಯಾಸ ಮಾಡಲು ಮೂಲ ಸೌಕರ್ಯಗಳನ್ನು ಒದಗಿಸಲು ರಾಜ್ಯದಲ್ಲಿ ಇಂತಹ 6 ಕೇಂದ್ರಗಳನ್ನು ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ 500 ಕೋಟಿ ರೂ.ಗಳನ್ನು ಕಾಯ್ದಿರಿಸುವಂತೆ ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾವ ಸಲ್ಲಿಸಿರುವುದಾಗಿ ರಹೀಮ್ ಖಾನ್ ಹೇಳಿದರು.
ಬೆಂಗಳೂರಿನಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಆರಂಭಿಸುವ ಉದ್ದೇಶ ಹೊಂದಲಾಗಿದೆ. ಈ ಬಗ್ಗೆ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯುವಜನರಲ್ಲಿ ಕ್ರೀಡಾಚಟುವಟಿಕೆಗಳನ್ನು ಉತ್ತೇಜಿಸಲು ಮುಂದಿನ ಹಂತದಲ್ಲಿ ಕಾರ್ಯಯೋಜನೆಯನ್ನು ರೂಪಿಸಲಾಗುವುದು. ರಾಜ್ಯದ ಕ್ರೀಡಾ ಹಾಸ್ಟೆಲ್ಗಳಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಸಚಿವರು ಹೇಳಿದರು.