ಬೆಂಗಳೂರು, ಮೇ. 16, ನ್ಯೂಸ್ ಎಕ್ಸ್ ಪ್ರೆಸ್: ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕುಂದಗೋಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಕಳೆದ ಒಂದು ತಿಂಗಳಿಂದ ರಮೇಶ್ ಜಾರಕಿಹೊಳಿ ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಬೆನ್ನಲ್ಲೇ ಮಹೇಶ್ ಕುಮಟಳ್ಳಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ನಮ್ಮ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಾದ ಅನಿವಾರ್ಯತೆ ಇಲ್ಲ. ಕುಂದಗೋಳದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದೇನೆ. ಪ್ರಸ್ತುತ ಕೃಷ್ಣಾ ನದಿಯಲ್ಲಿ ನೀರಿಲ್ಲ. ಹೀಗಾಗಿ ಅದರ ಕಡತ ತೆಗೆದುಕೊಂಡು ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚಿಸಲು ಬಂದಿದ್ದೇನೆ ಎಂದಿದ್ದಾರೆ.