ಮುಳಬಾಗಿಲು: ಪಟ್ಟಣದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಜೋಷ್ನಾ ಸಾವನ್ನು ಖಂಡಿಸಿ ಎಸ್ಎಫ್ಐನಿಂದ ಪ್ರತಿಭಟನೆ ನಡೆಯಿತು.
ನಗರದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯ ಸಾವಿಗೆ ಕಾರಣರಾದ ಸಮಾಜ ಕಲ್ಯಾಣಾಧಿಕಾರಿಗಳ ವಿರುದ್ಧ ಘೋಷಣೆ ಹಾಕಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ಕೆ.ವಾಸುದೇವರೆಡ್ಡಿ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶೌಚಾಲಯ ಗೋಡೆ ಕುಸಿದು 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇದು ಅಧಿಕಾರಿಗಳಿಂದ ಆಗಿರುವ ಶೈಕ್ಷಣಿಕ ಹತ್ಯೆಯಾಗಿದೆ. ಅಧಿಕಾರಿಗಳು ರಾಜಕಾಲುವೆಯನ್ನು ಒತ್ತುವರಿ ಮಾಡಿ ಕಟ್ಟಿರುವ ಬಿಲ್ಡಿಂಗ್ ನ್ನು ವಸತಿ ಶಾಲೆ ನಡೆಸಲು ಅನುಮತಿ ಪಡೆದಿರುವುದು ಭ್ರಷ್ಟಾಚಾರದ ಲಾಭಿಗಾಗಿ ಎಂದು ಗಂಭೀರವಾಗಿ ಆರೋಪಿಸಿದರು.
ವಿದ್ಯಾರ್ಥಿನಿ ಸಾವಿಗೆ ಕಾರಣವಾದ ಅಧಿಕಾರಿಗಳಾದ ವಾರ್ಡನ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.
ಈ ರೀತಿ ದುರ್ವ್ಯವಸ್ಥೆಯಲ್ಲಿರುವ ಕಟ್ಟಡಗಳ ಬಳಕೆ ನಿಷೇಧ ಮಾಡಬೇಕು. ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಹಾಸ್ಟೆಲ್ ಗಳಲ್ಲಿ ಸಮರ್ಪಕ ಕಟ್ಟಡ, ಶೌಚಾಲಯ ನಿರ್ಮಿಸಬೇಕು. ವಿದ್ಯಾರ್ಥಿನಿ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೋಲಾರ ಸಮಾಜ ಕಲ್ಯಾಣಾಧಿಕಾರಿ ಮನವಿ ಸ್ವೀಕರಿಸಿದರು.
ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಶಿವಪ್ಪ ಈ ಎಲ್ಲ ಬೇಡಿಕೆಗಳು 10 ದಿನಗಳಲ್ಲಿ ಈಡೇರಿಕೆ ಮಾಡದಿದ್ದರೆ. ಸಂಘಟನೆಯ ವತಿಯಿಂದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕಚೇರಿ ಚಲೋ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಕಾಂತ್, ತಾಲೂಕು ಅಧ್ಯಕ್ಷ ಸುರೇಶ್ ಬಾಬು, ಕಾರ್ಯದರ್ಶಿ ಆನಂದ್ ಕುಮಾರ್, ಉಪಾಧ್ಯಕ್ಷರು ಅಂಕಿತಾ, ಶಶಿಕುಮಾರ್, ಸಹ ಕಾರ್ಯದರ್ಶಿ ಶಂಕರ್, ಅಭಿಷೇಕ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ರೈತ ಸಂಘದ ಮುಖಂಡರು ಹೋರಾಟಕ್ಕೆ ಬೆಂಬಲ ನೀಡಿದ್ದರು.