ಬೆಂಗಳೂರು, ಡಿ. 8 : ಭಾರತವು ಅತ್ಯಾಚಾರಿಗಳ ರಾಜಧಾನಿಯಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ನೀಡಿರುವ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಖಂಡಿಸಿದ್ದಾರೆ. ಕಾಂಗ್ರೆಸ್ನಂತಹ ಹಿರಿಯ ಪಕ್ಷದ ಮುಖಂಡರಾಗಿರುವ ರಾಹುಲ್ಗಾಂಧಿ ಅವರು ಜವಾಬ್ದಾರಿ ಅರಿತು ಮಾತನಾಡಬೇಕು.
ಬೇಜವಾಬ್ದಾರಿಯ ಹೇಳಿಕೆ ನೀಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ರಾಷ್ಟ್ರದ ಗೌರವ ಮಣ್ಣುಪಾಲಾಗುತ್ತದೆ ಎಂಬ ಕನಿಷ್ಠ ತಿಳುವಳಿಕೆ ಇರಬೇಕೆಂದು ಎಂದು ಕಿಡಿಕಾರಿದ್ದಾರೆ. ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಸಾಮಾಜಿಕ ಪಿಡುಗುಗಳಾಗಿವೆ. ಇವುಗಳನ್ನು ಮಟ್ಟಹಾಕಲು ಎಲ್ಲಾ ಪಕ್ಷಗಳು ಸಂಘಟಿತ ಹೋರಾಟ ಮಾಡಬೇಕು. ಅದನ್ನು ಬಿಟ್ಟು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುವುದರಿಂದ ಸಮಸ್ಯೆಗಳು ಬಗೆಹರಿಯುವುದಿಲ್ಲ. ಈ ರೀತಿಯ ಸಮಸ್ಯೆಗಳು ಇದ್ದಾಗ ಪ್ರಚೋದನಕಾರಿ ಹೇಳಿಕೆ ನೀಡಿದರೆ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಲಿವೆಯೇ ಹೊರತು ಪರಿಹಾರ ಸಿಗುವುದಿಲ್ಲ ಎಂದಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಿಂಸಾಚಾರದಲ್ಲಿ ನಂಬಿಕೆ ಹೊಂದಿದ್ದಾರೆ ಎಂದು ರಾಹುಲ್ಗಾಂಧಿ ಹೇಳಿರುವುದು ಖಂಡನೀಯ.