ಕಲಬುರ್ಗಿ, ಜು. 05 : ನಗರವೂ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಭಾನುವಾರದ ಲಾಕ್ ಡೌನ್ ಗೆ ಉತ್ತಮ ಸ್ಪಂದನೆ ದೊರೆಯಿತು. ಔಷಧ, ಹಾಲು, ಹೂವು, ಪೆಟ್ರೋಲ್ ಬಂಕ್ ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ ಸಂಪೂರ್ಣ ಬಂದ್ ಆಗಿತ್ತು. ಅತ್ಯಂತ ಜನನಿಬಿಡ ಪ್ರದೇಶವಾದ ಇಲ್ಲಿನ ‘ಸೂಪರ್ ಮಾರ್ಕೆಟ್’ನಲ್ಲಿ ಕೂಡ ವರ್ತಕರು ಸ್ವಯಂ ಪ್ರೇರಣೆಯಿಂದ ಮಳಿಗೆಗಳನ್ನು ಬಂದ್ ಮಾಡಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕೆಲವು ಹೋಟೆಲ್ ಮಾಲೀಕರು ಬೆಳಿಗ್ಗೆ ಪಾರ್ಸೆಲ್ ನೀಡಲು ಆರಂಭಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಬಂದ್ ಮಾಡಿಸಿದರು. .
ಐತಿಹಾಸಿಕ ಶರಣಬಸವೇಶ್ವರ ದೇವಸ್ಥಾನ, ಖಾಜಾ ಬಂದಾ ನವಾಜ್ ದರ್ಗಾ, ರಾಮ ಮಂದಿರ ಸೇರಿದಂತೆ ಎಲ್ಲ ದೇವಸ್ಥಾನ ಹಾಗೂ ಮಸೀದಿಗಳು ಬಾಗಿಲು ಮುಚ್ಚಿದ್ದವು. ಬೆಳಿಗ್ಗೆ 6ರಿಂದಲೇ ಪೊಲೀಸರು ವಾಹನಗಳಲ್ಲಿ ಗಸ್ತು ಸುತ್ತಿ ಮನೆಯಿಂದ ಹೊರಬರದಂತೆ ಜನರಿಗೆ ಎಚ್ಚರಿಕೆ ನೀಡಿದರು.
ಕೇಂದ್ರ ಬಸ್ ನಿಲ್ದಾಣ, ಎಸ್ ವಿ ಪಿ ವೃತ್ತ, ರಾಷ್ಟ್ರಪತಿ ಚೌಕ, ಜಗತ್ ಸರ್ಕಲ್ ಸೇರಿದಂತೆ ವಾಹನ ದಟ್ಟಣೆ ಇರುತ್ತಿದ್ದ ಸ್ಥಳಗಳು ಬಿಕೋ ಎನ್ನುತ್ತಿದ್ದವು