ಚಾಮರಾಜನಗರ:ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ತಪ್ಪಿಸಬೇಕು, ಅಕ್ರಮಗಣಿಗಾರಿಕೆ ಸ್ಥಗಿತಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಜಿಲ್ಲಾ ರೈತಸಂಘ, ಹಸಿರುಸೇನೆ ಕಾರ್ಯಕರ್ತರು ನಗರಕ್ಕೆ ಭೇಟಿ ನೀಡಿದ್ದ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಅವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗಣಿಗಾರಿಕೆಯಲ್ಲಿ ಬಳಸುವ ಸ್ಫೋಟಕಗಳಿಂದ ಸುತ್ತಮುತ್ತಲ ಜನರಿಗೆ ತೊಂದರೆಯಾಗುತ್ತಿದೆ, ಜಾನುವಾರುಗಳು ಸಾವನ್ನಪ್ಪುತ್ತಿವೆ, ಇದನ್ನು ತಪ್ಪಿಸಬೇಕು, ಹೆಗ್ಗೊಠಾರ, ಮುತ್ತಿಗೆ ಗ್ರಾಮದ ಸುತ್ತ 7 ಜಲ್ಲಿ ಕ್ರಷರ್ಗಳಿಗೆ ಅನುಮತಿ ನೀಡಲಾಗಿದ್ದು, ಅದರಿಂದ ಹೊರಬರುವ ಧೂಳಿನಿಂದ ಫಸಲು ನಾಶವಾಗುತ್ತಿವೆ, ಇದನ್ನು ಸ್ಥಗಿತಗೊಳಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕು, ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅಕ್ರಮಗಣಿಗಾರಿಕೆ ನಡೆಯುತ್ತಿದ್ದು, ಕೂಡಲೇ ಸರ್ಕಾರ ಸ್ಥಗಿತಗೊಳಿಸಬೇಕು, ವನ್ಯಜೀವಿಧಾಮದಿಂದ 10 ಕಿಮೀ ವ್ಯಾಪ್ತಿಯಲ್ಲಿ ನಡೆಯುವ ಗಣಿಗಾರಿಕೆ ನಿಷೇಧಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಸಚಿವ ಸಿ.ಸಿ.ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬುದನ್ನು ಪರಿಶೀಲಿಸಿ ಮುಂದಿನ ಕ್ರಮವಹಿಸಲಾಗುತ್ತದೆ, ಯಾವುದೇ ಕಾರಣಕ್ಕೂ ಪರಿಸರ ನಾಶವಾಗಲು ಬಿಡುವುದಿಲ್ಲ. ಚಿರತೆಗಳು ವಾಸಮಾಡುವ ಪೊಟರೆಗಳನ್ನು ಮುಚ್ಚಿಸಲು ಇಲಾಖಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.