ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು ಎಂಟು ವರ್ಷಗಳ ಕಾಲ ತಾಯಿ ಚಾಮುಂಡೇಶ್ವರಿಯ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ ಆನೆ ಅರ್ಜುನನೂ ನಿನ್ನೆ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟಿದೆ.
ಒಂಟಿ ಸಲಗದ ಜತೆ ಹೋರಾಡಿ ಮೃತಪಟ್ಟಿದ್ದ ಅರ್ಜುನನ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ನೆರವೇರಿಸಲಾಗಿದೆ. ಮೊದಲು ಅರ್ಜುನನ ಕಳೆಬರಕ್ಕೆ ಅರ್ಚಕರು ಪೂಜೆ ಸಲ್ಲಿಸಿದರು. ಬಳಿಕ ಜಿಲ್ಲಾಡಳಿತದಿಂದ ಅರ್ಜುನನಿಗೆ ಸರ್ಕಾರಿ ಗೌರವ ಸಮರ್ಪಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಗಿದೆ..
ಅಗಲಿದ ಅರ್ಜುನನಿಗೆ ಮಾವುತ ವಿನು ಕಣ್ಣೀಡುತ್ತಲೇ ಪ್ರದಕ್ಷಿಣಿ ಹಾಕಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಎಲ್ಲಾ ಮುಗಿದ ಮೇಲೆ ಜೆಸಿಬಿಯಿಂದ 15 ಅಡಿಗಳ ಆಳದವರೆಗೆ ಗುಂಡಿ ತೋಡಲಾಯಿತು. ಈ ವೇಳೆ ಅಲ್ಲಿದ್ದ ಜನರು ಸಮಾಧಿಗೆ ಉಪ್ಪು, ಸುಣ್ಣ, ಬ್ಲೀಚಿಂಗ್ ಪೌಡರ್ ಹಾಕಿದರು. ಬಳಿಕ ಜೆಸಿಬಿ ಸಹಾಯದಿಂದ ಅರ್ಜುನನ ದೇಹವನ್ನ ಸಮಾಧಿಗೆ ಇಳಿಸಿ ಮಣ್ಣು ಮುಚ್ಚಲಾಗಿದೆ. 22 ವರ್ಷಗಳ ಕಾಲ ದಸರಾದಲ್ಲಿ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಹೀಗೆ ದುರಂತ ಅಂತ್ಯ ಕಂಡಿದ್ದು ನಿಜಕ್ಕೂ ದುಃಖದ ಸಂಗತಿ.