ಬೆಂಗಳೂರು: ನಿನ್ನೆ ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ಕಾರಿನಲ್ಲಿ ತೆರಳುತ್ತಿದ್ದ ಯುವಕರನ್ನ ಅನ್ಯಕೋಮಿನ ಕೆಲ ಯುವಕರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೈ ಶ್ರೀರಾಮ್ ಎಂದು ಘೋಷಣೆ ಕೂಗಿಕೊಂಡು ಮೂವರು ಯುವಕರು ಹೋಗುತ್ತಿದ್ದ ಕಾರಿಗೆ ಅಡ್ಡಗಟ್ಟಿದ ಇಬ್ಬರು ಯುವಕರು ಆಕ್ಷೇಪ ವ್ಯಕ್ತಪಡಿಸಿ, ಹಲ್ಲೆ ನಡೆಸಿರುವ ಆರೋಪದ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಲ್ಲದೇ, ಯುವಕರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಇದಕ್ಕೆ ಕಾರಿನಲ್ಲಿದ್ದ ಯುವಕನೊಬ್ಬ ಇದನ್ನು ಪ್ರಶ್ನಿಸಿ ಕಾರಿನಿಂದ ಕೆಳಗಿಳಿಯುತ್ತಿದಂತೆ ಕ್ಷಣಾರ್ಧದಲ್ಲೇ ಯುವಕರು ಎಸ್ಕೇಪ್ ಆಗಿದ್ದಾರೆ. ಬಳಿಕ ಮತ್ತೆ ಕಾರನ್ನು ಫಾಲೋ ಮಾಡಿದ ಇಬ್ಬರು ಯುವಕರು ಜೊತೆಗೆ ಮತ್ತೆ ಮೂವರನ್ನು ಒಗ್ಗೂಡಿಸಿಕೊಂಡು ಬಂದು ದೊಣ್ಣೆಯಿಂದ ಹಲ್ಲೆ ನಡೆಸಿ, ಎಸ್ಕೇಪ್ ಆಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಿಂದನೆ ದೃಶ್ಯಾವಳಿ ಮೊಬೈಲ್ನಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಇಬ್ಬರು ಆರೋಪಿಗಳು ಹಾಗೂ ಇನ್ನಿಬ್ಬರು ಅಪ್ರಾಪ್ತರ ಸಹಿತ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.