ಬೆಂಗಳೂರು : ಬೆಂಗಳೂರಿನಲ್ಲಿ ಯಾರು ಚಿಂತೆ ಮಾಡುವ ಅಗತ್ಯವಿಲ್ಲ.. ಪ್ರತೀ ಎರಡು ವಾರ್ಡ್ ಗಳಿಗೆ ಒಂದೊಂದು ಆ್ಯಂಬುಲೆನ್ಸ್ಗಳನ್ನು ಮೀಸಲಿಡಲಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ದಿನಕಳೆದಂತೆ ಕೊರೋನಾ ಆರ್ಭಟ ಜೋರಾಗಿದ್ದು, ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಗದೇ ರೋಗಿಗಳು ಪರದಾಡುತ್ತಿರುವ ಸುದ್ದಿಗಳ ನಡುವೆಯೇ ಕಂದಾಯ ಸಚಿವ ಆರ್ ಆಶೋಕ್ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ.
ಕೋವಿಡ್-19 ಚಿಕಿತ್ಸಾ ವ್ಯವಸ್ಥೆ ಕುರಿತಂತೆ ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರಮುಖರ ಸಭೆ ಕರೆಯಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ 10 ಸಾವಿರ ಹಾಸಿಗೆಗಳಿವೆ. ಅವುಗಳಲ್ಲಿ 5 ಸಾವಿರ ಹಾಸಿಗೆಗಳನ್ನು ತೆಗೆದುಕೊಳ್ಳಲು ಉದ್ದೇಶಿಸಿದ್ದೇವೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಈಗಾಗಲೇ ಸೂಚನೆ ಹೋಗಿದೆ. ಅವರ ಜೊತೆ ಮಾತನಾಡಿ ದರ ನಿಗದಿಪಡಿಸುತ್ತೇವೆ ಎಂದು ಅಶೋಕ್ ಸ್ಪಷ್ಟಪಡಿಸಿದರು.