ಬೆಂಗಳೂರು, ಸೆ. 9: ಮೈತ್ರಿ ಸರ್ಕಾರ ಹಾಗೂ ನೂತನವಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರ್ಕಾರ ಕಳೆದ ಒಂದೂವರೆ ವರ್ಷಗಳಿಂದ ಹತ್ತಾರು ಹೊಸ ಯೋಜನೆಗಳಿಗೆ ಚಾಲನೆ ನೀಡಿತ್ತು. ಆದರೆ, ಇದೀಗ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಬಹುತೇಕ ಎಲ್ಲಾ ಹೊಸ ಯೋಜನೆಗಳಿಗೆ ಅನುದಾನವನ್ನು ಸ್ಥಗಿತಗೊಳಿಸಲಾಗುತ್ತಿದೆ. ಅಲ್ಲದೆ, ಯೋಜನೆಗಳಿಗೆ ಸಂಬಂಧಿಸಿದ ಕಡತಗಳಿಗೆ ಹಿಂಬರಹ ಬರೆದು ಅಧಿಕೃತ ಸೂಚನೆ ನೀಡುತ್ತಿರುವ ಹಣಕಾಸು ಇಲಾಖೆ ಕಾಮಗಾರಿಗಳನ್ನು ಸ್ಥಗಿತಗೊಳಿಸುತ್ತಿದೆ. ನೆರೆಪರಿಹಾರ ಹೊರತುಪಡಿಸಿ ಬೇರೆ ಯಾವುದೇ ಹೊಸ ಕಾಮಗಾರಿಗಳಿಗೆ ಹಣ ಇಲ್ಲ ಎಂದು ಸೂಚಿಸುತ್ತಿದೆ.
ಆರ್ಥಿಕ ಸಂಕಷ್ಟದಿಂದಾಗಿ ಪಿಡಬ್ಲ್ಯೂಡಿ ಇಲಾಖೆಯ ಅಡಿಯಲ್ಲಿ ಚಾಲನೆ ನೀಡಲಾಗಿದ್ದ ಹೊಸ ಕಟ್ಟಡಗಳು ಹಾಗೂ ಸೇತುವೆಗಳ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಅಂದಾಜಿನ ಪ್ರಕಾರ 1,200 ಕೋಟಿ ರೂ. ಪ್ರಮಾಣದ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲಾ 34 ಇಲಾಖೆಗಳ ಅನಗತ್ಯ ಯೋಜನೆಗಳಿಗೆ ಫುಲ್ ಸ್ಟಾಪ್ ಹಾಕಲಾಗಿದೆ.