ಬೆಂಗಳೂರು, ನ. 18: ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಹಲ್ಲೆಯಾಗಿರುವ ಕುರಿತು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ತಿಳಿದು ತೀವ್ರ ನೋವಾಗಿದೆ ಎಂದಿರುವ ಮುಖ್ಯಮಂತ್ರಿಗಳು ಸ್ಥಳೀಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಶಾಸಕರ ಚಿಕಿತ್ಸೆ ಕುರಿತು ಮಾಹಿತಿ ಪಡೆದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಕೂಡಲೇ ಮೈಸೂರಿಗೆ ತೆರಳಿ ತನ್ವೀರ್ ಸೇಠ್ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ಮಾಹಿತಿ ಪಡೆಯುವಂತೆ ಸೂಚಿಸಿದ್ದು, ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.