ದೌರ್ಜನ್ಯ ಪ್ರತಿಬಂಧದ ಕುರಿತು ಅರಿವು

ದೌರ್ಜನ್ಯ ಪ್ರತಿಬಂಧದ ಕುರಿತು ಅರಿವು

ದೇವನಹಳ್ಳಿ, ಸೆ. 21: ಅನುಸೂಚಿತ ಜಾತಿಗಳು ಮತ್ತು ಬುಡಕಟ್ಟುಗಳ ದೌರ್ಜನ್ಯ ಪ್ರತಿಬಂಧ ಕಾನೂನುಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಚಪ್ಪರಕಲ್ಲು ಸರ್ಕಲ್ ಬಳಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಎರಡನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೇಲಿನ ದೌರ್ಜನ್ಯ ಪ್ರತಿಬಂದ ನಿಯಮಗಳು 1995 ರ ನಿಯಮ 17 ರ ಅನ್ವಯ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಗಳು ಹಾಗೂ ಸಂಬಂಧಿಸಿದ ಪರಿಹಾರ ಪ್ರಕ್ರಿಯೆಯ ಮಾಹಿತಿಯನ್ನು ಪಡೆದರಲ್ಲದೆ, ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಕಾನೂನಿನ ನಿಯಮಾನುಸಾರ ಸಹಾಯಧನ ನೀಡುವುದು, ಅನುಕಂಪದ ಆಧಾರದ ಮೇರೆಗೆ ಸರ್ಕಾರಿ ಉದ್ಯೋಗ ನೀಡುವುದು, ಬಿ.ಪಿ.ಎಲ್. ಪಡಿತರ ಚೀಟಿ, ಆಯುಷ್ಮಾನ್ ಕಾರ್ಡ್, ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡುವುದು ಹಾಗೂ ಸರ್ಕಾರಿ ಜಮೀನು ಅವಲಂಬಿತ ಬುಡಕಟ್ಟು ರೈತ ವರ್ಗಕ್ಕೆ ಉಚಿತ ನಿವೇಶನ ನೀಡುವಂತಹ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ಸಂಪೂರ್ಣ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ ಎಂದರು.

ಸಕಾಲದ ಮೂಲಕ ದಾಖಲಾಗುವ ದೌರ್ಜನ್ಯ ಪ್ರಕರಣಗಳನ್ನು 7 ದಿನಗಳ ಒಳಗಾಗಿ ಪರಿಶೀಲಿಸಿ, ಪರಿಹಾರ ನೀಡಲಾಗುವುದೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹನುಮಂತರಾಯಪ್ಪ ಅವರು ಸಭೆಯಲ್ಲಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಜಿತ್.ವಿ.ಜೆ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭವ್ಯ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರೀತಿ, ನಾಲ್ಕು ತಾಲೂಕುಗಳ ತಹಶೀಲ್ದಾರ್‌ಗಳು, ಸಮಾಜ ಕಲ್ಯಾಣ ಇಲಾಖೆ ತಾಲೂಕು ಸಹಾಯಕ ನಿರ್ದೇಶಕರುಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರುಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos