ಬೆಂಗಳೂರು, ಜು. 16 : ಐಎಂಎ ಬಹುಕೋಟಿ ವಂಚನೆ ಪ್ರಕರಣದ ಸಂಬಂಧ ಶಾಸಕ ಆರ್. ರೋಷನ್ ಬೇಗ್ ವಿಶೇಷ ತನಿಖಾ ತಂಡ(ಎಸ್ಐಟಿ) ಕೆಂಪೇಗೌಡ ವಿಮಾನ ನಿಲ್ದಾಣ ದಲ್ಲಿ ವಶಕ್ಕೆ ಪಡೆದಿದೆ.
ಬೆನ್ನಲ್ಲೇ ಸಿಎಂ ಕುಮಾರ ಸ್ವಾಮಿ ಮತ್ತು ಬಿಜೆಪಿ ನಡುವೆ ರಾಜಕೀಯ ಟ್ವೀಟ್ ಸಮರ ನಡೆದಿದೆ.
ಈ ಬೆಳವಣಿಗೆ ಕುರಿತಂತೆ ತತ್ಕ್ಷಣವೇ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ರೋಷನ್ ಬೇಗ್ ತಪ್ಪಿಸಿಕೊಳ್ಳಲು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಂತೋಷ್ ಸಹಾಯ ಮಾಡುತ್ತಿರುವುದು ಕಂಡು ಬಂದಿದೆ. ಇವರಿಬ್ಬರು ಬಾಡಿಗೆ ವಿಮಾನದಲ್ಲಿ ಮುಂಬಯಿಗೆ ತೆರಳಲು ಯತ್ನಿಸುತ್ತಿದ್ದರು. ಈ ವೇಳೆ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಬಿಎಸ್ವೈ ಆಪ್ತ ಎನ್.ಆರ್.ಸಂತೋಷ್ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಜತೆಗೆ ವಿಮಾನ ನಿಲ್ದಾಣದಲ್ಲಿ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಅವರೂ ಇದ್ದರು ಎಂದಿರುವ ಸಿಎಂ, ಬಿಜೆಪಿ ನೇರವಾಗಿಯೇ ಕುದುರೆ ವ್ಯಾಪಾರಕ್ಕಿಳಿದು ಸರಕಾರವನ್ನು ಪತನಗೊಳಿಸುವ ಯತ್ನಕ್ಕೆ ಕೈಹಾಕಿರುವುದು ಕಂಡು ಬಂದಿದೆ ಎಂದು ಆರೋಪಿಸಿದ್ದಾರೆ.