ಬೆಂಗಳೂರು: ಬೇಲೇಕೇರಿ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್ ವಾರೆಂಟ್ ನೀಡಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಆನಂದ್ ಸಿಂಗ್, ನಾಗೇಂದ್ರ ಹಾಗೂ ಜನಾರ್ದನ ರೆಡ್ಡಿ ಅವರ ಸಹಾಯಕ ಪಿ.ಎ.ಅಲಿಖಾನ್ ವಿಚಾರಣೆಗೆ ಹಾಜರಾದರು.
ಬೆಳಗ್ಗೆ 12 ಗಂಟೆ ಸಮಯದಲ್ಲಿ ಮೂವರು ಕೂಡಾ ಸಿಟಿ ಸಿವಿಲ್ ಕೋರ್ಟ್ ನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದರು.
ಬೇಲೇಕೇರಿ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂಬ ಕಾರಣಕ್ಕೆ ವಿಶೇಷ ತನಿಖಾ ದಳದ ಮನವಿ ಮೇರೆಗೆ ಕಾಂಗ್ರೆಸ್ನ ಇಬ್ಬರು ಶಾಸಕರಿಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವಿಶೇಷ ತನಿಖಾ ದಳದ ಮನವಿ ಮೇರೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ವಿ.ಪಾಟೀಲ್ ಅವರು ವಾರಂಟ್ ಜಾರಿ ಮಾಡಿದ್ದರು.
2009ರಲ್ಲಿ ಆನಂದ್ಸಿಂಗ್ ಒಡೆತನದ ವೈಷ್ಣವಿ ಮಿನರಲ್ಸ್ ಕಂಪನಿಯಿಂದ ಅದಿರನ್ನು ಸಿಂಗಾಪುರ ಮತ್ತು ಚೀನಾಕ್ಕೆ ಅಕ್ರಮವಾಗಿ ಸಾಗಿಸಲಾಗಿದೆ ಎಂಬ ಆರೋಪವಿದೆ. ಆನಂದ್ಸಿಂಗ್ ಜೊತೆಗೆ ನಾಗೇಂದ್ರ ಒಡೆತನದ ಕಂಪನಿಯು ಈ ಅಕ್ರಮದಲ್ಲಿ ಭಾಗಿಯಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ರಾಜ್ಯ ಸರ್ಕಾರ ರಚಿಸಿದ ಎಸ್ಐಟಿ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು. ವಿಚಾರಣೆಗೆ ಹಾಜರಾಗುವಂತೆ ಹಲವಾರು ಬಾರಿ ನೋಟಿಸ್ ನೀಡಿದ್ದರೂ ಈ ಇಬ್ಬರು ಶಾಸಕರು ಗೈರು ಹಾಜರಾಗಿದ್ದರು ಎನ್ನಲಾಗಿದೆ.