ಮಧುಗಿರಿ: ಕೇಂದ್ರ ಸರ್ಕಾರ ೨೦೧೩ರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದನ್ನು ಖಂಡಿಸಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ತಾಲ್ಲೂಕು ಶಾಖೆಯ ಪದಾಧಿಕಾರಿಗಳು ಹಾಗೂ ನೌಕರರು ಬೆಸ್ಕಾಂ ಕಚೇರಿ ಮುಂಭಾಗ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಿರುವುದು ಕಾರ್ಮಿಕರ ವಿರೋಧಿ ನೀತಿಯಾಗಿದೆ. ಇದರಿಂದ ರೈತರು ಹಾಗೂ ಜನ ಸಾಮಾನ್ಯರಿಗೆ ತೀವ್ರ ತೊಂದರೆಯಾಗಲಿದ್ದು, ತಕ್ಷಣ ಈ ನೀತಿಯನ್ನು ಕೈ ಬಿಡಬೇಕು ಎಂದು ಬೆಸ್ಕಾಂ ನೌಕರರು ಆಗ್ರಹಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಸೈಯ್ಯದ್ ಮಹಬೂಬ್ ಪಾಷಾ ಮಾತನಾಡಿ ಕೇಂದ್ರ ಸರ್ಕಾರವು ಈ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದನ್ನು ನಾವು ಖಂಡಿಸುತ್ತೇವೆ ಹಾಗು ಕೇಂದ್ರ ಸರ್ಕಾರದ ಕ್ರಮ ವಿರೋಧಿಸುತ್ತೇವೆಂದರು. ರಾಜ್ಯ ಮಟ್ಟದಲ್ಲಿ ಎಲ್ಲಾ ವಿದ್ಯುತ್ ಕಂಪನಿ ನೌಕರರು ಕಪ್ಪುಪಟ್ಟಿ ಧರಿಸಿ ಖಾಸಗೀಕರಣ ವಿರುದ್ಧ ವಿರೋಧ ವ್ಯಕ್ತಪಡಿಸಿಖಾಸಗೀಕರಣ ವಿರುದ್ಧ ಬೆಸ್ಕಾಂ ನೌಕರರ ವಿರೋಧದ್ದು ಇದಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.
ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ರಾಮಯ್ಯ ಮಾತನಾಡಿ, ರೈತರಿಗೆ ಹಾಗೂ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಬೆಸ್ಕಾಂ ಇಲಾಖೆ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಖಾಸಗೀಕರಣ ಮಾಡಿದರೆ, ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತದೆ ಆದ್ದರಿಂದ ಸರ್ಕಾರ ಈ ನೀತಿಯನ್ನು ತಕ್ಷಣ ಕೈಬಿಡಬೇಕು ಒತ್ತಾಯಿಸಿದರು.