ಬೆಂಗಳೂರು, ಡಿ. 22: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಗೆ ನಗರದಲ್ಲಿ ಬೃಹತ್ ಸಮಾವೇಶ ನಡೆದಿದೆ. ವಿವಿಧ ಸಂಘಟನೆಗಳು ಟೌನ್ಹಾಲ್ ಬಳಿ ಏಕಾಏಕಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿವೆ.
ಇಂಡಿಯನ್ ಸಿಟಿಜನ್ ಫಾರ್ ಸಿಎಎ ಎಂಬ ಘೋಷವಾಕ್ಯದೊಂದಿಗೆ ಹಲವಾರು ಸಂಘಟನೆಗಳು ಕೇಂದ್ರ ಸರ್ಕಾರದ ಉದ್ದೇಶಿತ ಮಸೂದೆಗೆ ಬೆಂಬಲ ಸೂಚಿಸಿ ಮಸೂದೆಯಿಂದ ದೇಶದ ಯಾವುದೇ ನಾಗರಿಕರಿಗೂ ತೊಂದರೆಯಾಗುವುದಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳು ಹಾಗೂ ಸಂಘಟನೆಗಳಿಗೆ ತಿರುಗೇಟು ಎಂಬಂತೆ ಪ್ರತಿಭಟನೆ ನಡೆಸಿದ ಇಂಡಿಯನ್ ಸಿಟಿಜನ್ ಫಾರ್ (ಸಿಎಎ) ಸಂಘಟನೆಯವರು ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಗೆ ಅಡ್ಡಿಪಡಿಸಬಾರದೆಂದು ಮನವಿ ಮಾಡಿದರು.
ಯಾವುದೋ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆ ಜಾರಿ ಮಾಡಿಲ್ಲ. ಭಾರತದಲ್ಲಿ ಕಾನೂನು ಬಾಹಿರವಾಗಿ ಒಳನುಸುಳುಕೋರರನ್ನು ಹಿಮ್ಮೆಟ್ಟಿಸುವ ಸದುದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ಪ್ರತಿಪಕ್ಷಗಳು ಕೆಲವು ನಿರ್ದಿಷ್ಟ ಸಮುದಾಯದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.