ಬೆಂಗಳೂರು, ಮಾ. 20: ರಾಜರಾಜೇಶ್ವರಿ ನಗರ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನಗೆ ನಕಲಿ ವೋಟರ್ ಐಡಿ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ, ತನ್ನನ್ನು ಶಾಸಕ ಎಂದು ಘೋಷಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಮಧ್ಯಂತರ ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ಇಂದು ವಜಾ ಮಾಡಿದ್ದು, ಒಂದು ಪ್ರಕರಣ ಇತ್ಯರ್ಥಗೊಂಡಿದೆ.
ಪ್ರಕರಣದಲ್ಲಿ ಚುನಾವಣಾ ಆಯೋಗವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ. ಹೀಗಾಗಿ ಚುನಾವಣೆ ನಡೆಸಲು ಆಯೋಗಕ್ಕೆ ಆದೇಶಿಸಲು ಬರುವುದಿಲ್ಲ. ಆದರೆ ಆರ್.ಆರ್.ನಗರ ಕ್ಷೇತ್ರದ ಜನಪ್ರತಿನಿಧಿ ಇಲ್ಲದೆ ಇರುವುದು ಸೂಕ್ತವಲ್ಲ ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅಭಿಪ್ರಾಯಪಟ್ಟರು.
ಮುನಿರತ್ನರನ್ನ ಶಾಸಕ ಸ್ಥಾನದಿಂದ ಅಸಿಂಧುಗೊಳಿಸುವಂತೆ ಕೋರಿದ್ದ ಮುಖ್ಯ ಅರ್ಜಿ ಬಾಕಿಯಿದ್ದು, ಅದರ ವಿಚಾರಣೆಯನ್ನ ಹೈಕೋರ್ಟ್ ಏ.15ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.