ಬೆಂಗಳೂರು, ಸೆ. 9 : ಡಿಕೆಶಿ ಬಂಧನ ಹಿಂದೆ ಸಿದ್ದು ಕೈವಾಡ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಹೇಳಿಕೆ ನೀಡಿರುವ ಹಿನ್ನಲೆ ಪ್ರತಿಕ್ರಿಯೆ ನೀಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕನಿಷ್ಠ ಜ್ಞಾನವೂ ಇಲ್ಲ. ಆದಾಯ ತೆರಿಗೆ (ಐಟಿ) ಇಲಾಖೆ ಮತ್ತು ಜಾರಿ ನಿರ್ದೇಶನಾಲಯ(ಇ.ಡಿ.) ಯಾರ ಅಧೀನದಲ್ಲಿವೆ ಎಂಬುದು ಗೊತ್ತಿದೆಯೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಕೇಂದ್ರ ಸರ್ಕಾರದ ಅಧೀನದಲ್ಲಿವೆ. ಈ ಕುರಿತು ಅವರಿಗೆ ತಿಳಿದಿಲ್ಲವೇ? ಇಂತಹವರನ್ನು ಯಾಕೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೋ? ಹುಳಿ ಹಿಂಡುವುದು, ಬೆಂಕಿ ಹಚ್ಚುವುದೇ ಅವರ ಕೆಲಸ ಎಂದು ವಾಗ್ದಾಳಿ ನಡೆಸಿದರು.
ಸಿಎಂ ದ್ವೇಷದ ರಾಜಕಾರಣ : ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ಮಾಡುವುದು. ದ್ವೇಷದ ರಾಜಕಾರಣ ಮಾಡುವುದು ಅಷ್ಟೇ ಅವರ ಕೆಲಸವಾಗಿದೆ. ಅಧಿಕಾರ ವಹಿಸಿಕೊಂಡ ಮೊದಲ ದಿನ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದರು. ಆದರೆ, ಈಗ ಅವರು ಸಂಪೂರ್ಣವಾಗಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪ್ರವಾಹದಿಂದಾಗಿ ಉತ್ತರ ಕರ್ನಾಟಕದಲ್ಲಿ ಲಕ್ಷಾಂತರ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಅವರಿಗೆ ಇದುವರೆಗೆ ಪರಿಹಾರವನ್ನು ಕೊಟ್ಟಿಲ್ಲ. ಅವರಿಗೆ ಜನರ ಬಗ್ಗೆ ಕಾಳಜಿಯಿಲ್ಲ ಎಂದು ಬಿಎಸ್ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.