ಬೆಂಗಳೂರು, ಮೇ.9, ನ್ಯೂಸ್ ಎಕ್ಸ್ ಪ್ರೆಸ್: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ಇತರೆ ವಾಹನ ಚಾಲಕರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರಿನಿಂದ ತಮಿಳುನಾಡಿನ ತಿರುಪತ್ತೂರಿಗೆ ಖಾಸಗಿ ಬಸ್ನಲ್ಲಿ 40 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದರೆ ಬೆಳಗಿನ ಜಾವ ಸುಮಾರು 4 ಗಂಟೆಗೆ ಕರ್ನಾಟಕ – ತಮಿಳುನಾಡು ಗಡಿ ಭಾಗದ ಶೂಲಗಿರಿ ಸಮೀಪ ಬಸ್ನ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ನ ಅಕ್ಕ ಪಕ್ಕ ಚಲಿಸುತ್ತಿದ್ದ ಇತರೆ ವಾಹನಗಳ ಚಾಲಕರು ಬೆಂಕಿಯನ್ನು ಗಮನಿಸಿದ ಕೂಡಲೇ ಬಸ್ ಚಾಲಕನ ಗಮನಕ್ಕೆ ತಂದಿದ್ದಾರೆ. ಕೂಡಲೇ ಕಾರ್ಯ ಪ್ರವೃತ್ತನಾದ ಚಾಲಕ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಪ್ರಯಾಣಿಕರೆಲ್ಲರೂ ನಿದ್ರೆಯ ಮಂಪಿನಲ್ಲಿದ್ದರು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಬಸ್ನಲ್ಲಿದ್ದ ಲಗೇಜುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಬಸ್ನ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಶೂಲಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.