ಬೆಂಗಳೂರು, ಅ. 1: ಇಂದು ಮಾಜಿ ಸಚಿವ ಜಮೀರ್ ಅಹ್ಮದ್ ಅವರಿಗೆ ಸಿಬಿಐ ಅಧಿಕಾರಿಗಳು ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ದಿನಗಳ ಒಳಗಾಗಿ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿ ಮಾಡಿದ್ದಾರೆ.
ಐಎಂಎ ಕಂಪೆನಿ ಹೆಸರಿನಲ್ಲಿ ಸಾವಿರಾರು ಜನರಿಗೆ ಸುಮಾರು 20 ಸಾವಿರ ಕೋಟಿಗೂ ಅಧಿಕ ವಂಚನೆ ಮಾಡಿದ್ದ ಮನ್ಸೂರ್ ಖಾನ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ಗೆ ವಹಿಸಿರುವ ಪರಿಣಾಮ ಸಿಬಿಐ ಅಧಿಕಾರಿಗಳು ಕಳೆದ 1 ತಿಂಗಳಿನಿಂದ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣ ವೇಳೆ ಆರೋಪಿ ಮನ್ಸೂರ್ ಖಾನ್ ಮಾಜಿ ಸಚಿವರಾದ ರೋಷನ್ ಬೇಗ್ ಹಾಗೂ ಜಮೀರ್ ಅಹ್ಮದ್ ಅವರಿಗೆ ಹಣ ನೀಡಿರುವ ಕುರಿತು ಮಾಹಿತಿ ನೀಡಿದ್ದರು. ಹೀಗಾಗಿ ಜಮೀರ್ ಅಹ್ಮದ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಕಳುಹಿಸಿದ್ದಾರೆ.