ಬೆಂಗಳೂರು, ನ. 29 : ಕೆಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಆಟಗಾರರು, ತಂಡದ ಮಾಲೀಕರು ಸೇರಿ 100ಕ್ಕೂ ಅಧಿಕ ಮಂದಿಯನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಬಳ್ಳಾರಿ ಟಸ್ಕರ್ಸ್ ತಂಡದ ಆಟಗಾರ ಅಭಿಮನ್ಯು ಮಿಥುನ್ಗೂ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಪ್ರಸ್ತುತ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಆಡುತ್ತಿರುವ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗಲು 3 ದಿನಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಸಮ್ಮತಿ ಸೂಚಿರುವುದಾಗಿ ಸಿಸಿಬಿಯ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕೆಪಿಎಲ್ ಪಂದ್ಯದಿಂದ ಹಣ ಗಳಿಸುವ ಬದಲು ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ನಲ್ಲಿ ಕೆಲ ಆಟಗಾರರು ಕೈ ಜೋಡಿಸಿ ಹೆಚ್ಚು ಹಣ ಸಂಪಾದನೆ ಮಾಡಿರುವ ಮಾಹಿತಿ ಲಭ್ಯವಾಗಿದೆ. ಅದಕ್ಕಾಗಿ ಎಲ್ಲ ತಂಡಗಳ ಮಾಲೀಕರು, ವ್ಯವಸ್ಥಾಪಕರು ಮತ್ತು ಆಟಗಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ.