ಮಂಡ್ಯ , ಮೇ. 2, ನ್ಯೂಸ್ ಎಕ್ಸ್ ಪ್ರೆಸ್: ಸುಮಲತಾ ಅವರೊಂದಿಗೆ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಮಾಜಿ ಶಾಸಕರು ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಮಾಜಿ ಸಚಿವ ಚೆಲುವರಾಯಸ್ವಾಮಿ ಅಂಡ್ ಟೀಂ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಮಂಡ್ಯ ಕಾಂಗ್ರೆಸ್ ಅಧ್ಯಕ್ಷರಿಂದ ರೆಬೆಲ್ ನಾಯಕರ ಬಗ್ಗೆ ವರದಿ ತರಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ.
ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ. ಶಿವಕುಮಾರ್ ಸಭೆ ಸೇರಿ ಚರ್ಚೆ ನಡೆಸಿದ್ದು, ಮಂಡ್ಯ ಕಾಂಗ್ರೆಸ್ ಅಧ್ಯಕ್ಷರಿಂದ ವರದಿ ತರಿಸಿಕೊಂಡು ವರದಿಯ ಆಧಾರದ ಮೇಲೆ ರೆಬಲ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಿದ್ದು, ಕೆಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿರಲಿಲ್ಲ. ಮಂಡ್ಯದಲ್ಲಿ ಮೈತ್ರಿ ವಿರೋಧಿಸಿಕೊಂಡು ಬಂದಿದ್ದ ಮಾಜಿ ಶಾಸಕರು ಸುಮಲತಾ ಪರವಾಗಿ ಎಲ್ಲಿಯೂ ಬಹಿರಂಗವಾಗಿ ಪ್ರಚಾರ ನಡೆಸಿರಲಿಲ್ಲ. ಆದರೆ, ಸುಮಲತಾ ಅಂಬರೀಶ್ ಪರವಾಗಿ ಮತ ಹಾಕಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.