ಬೆಂಗಳೂರು: ರಾಜ್ಯದೆಲ್ಲೆಡೆ ಕ್ರಿಸ್ಮಸ್ ಹಬ್ಬ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅದರಲ್ಲಿಯೂ ಸಿಲಿಕಾನ್ ಸಿಟಿಯಲ್ಲಿ ಎಲ್ಲಾ ಚರ್ಚ್ಗಳಲ್ಲಿ ನಿನ್ನೆ ರಾತ್ರಿಯಿಂದ ಆಚರಣೆ ಶುರುವಾಗಿದೆ. ಕ್ರಿಸ್ಮಸ್ ಹಬ್ಬ ಹಿನ್ನೆಲೆಯಲ್ಲಿ ನಗರದ ಚರ್ಚ್ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ್ ನ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು ನಗರ ಆಯುಕ್ತರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಭದ್ರತೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್ಗಳ ಬಳಿ ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.