ಮಂಡ್ಯ, ಏ. 8, ನ್ಯೂಸ್ ಎಕ್ಸ್ ಪ್ರೆಸ್: ಮದ್ದೂರು ತಾಲೂಕಿನ ಭಾರತೀನಗರ ಸಮೀಪದ ಗುರುದೇವನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗುರುದೇವನಹಳ್ಳಿಯಲ್ಲಿ ಪ್ರಚಾರಕ್ಕೆ ಬರಬೇಕಾಗಿತ್ತು. ಅವರಿಗಾಗಿ ಜನ ಕಾಯುತ್ತಿದ್ದರು. ಈ ವೇಳೆ ಕಾರ್ತಿಕ್ ಹಾರ್ನ್ ಮಾಡುತ್ತಾ ಬೈಕ್ನಲ್ಲಿ ಬಂದಿದ್ದಾರೆ. ನಿಧಾನವಾಗಿ ತೆರಳುವಂತೆ ಸ್ಥಳದಲ್ಲಿದ್ದ ಜನರು ಹೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಘರ್ಷಣೆ ಉಂಟಾಗಿದೆ. ಘಟನೆಯಲ್ಲಿ ಅನಿಲ್ ಮತ್ತು ಕಾರ್ತಿಕ್ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಘಟನೆ ನಡೆದ ಬಗ್ಗೆ ಮಾಹಿತಿ ಪಡೆದುಕೊಂಡ ಕೂಡಲೇ ಆಸ್ಪತ್ರೆಗೆ ಆಗಮಿಸಿದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿ ತನಿಖೆಗೆ ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಭಾರತೀನಗರ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.