ಬೆಂಗಳೂರು: ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಹಾಗೂ ಪ್ರಸಿದ್ಧ ಭಾಗವತರೂ ಆದ ಕರಾವಳಿ ಕೋಗಿಲೆ ಎಂದೇ ಹೇಳಲಾಗುವ ಸುಬ್ರಹ್ಮಣ್ಯ ಧಾರೇಶ್ವರ ತನ್ನ 67ನೇ ವಯಸ್ಸಿನಲ್ಲಿ ಬೆಂಗಳೂರಿನ ಮನೆಯಲ್ಲಿ ಇಂದು ಬೆಳಿಗ್ಗೆ ನಿಧನ ಹೊಂದಿದರು.
ಕರ್ನಾಟಕದ ಯಕ್ಷಗಾನ ಭಾಗವತ, ಶ್ರೇಷ್ಠ ಕಲಾವಿದರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಧಾರೇಶ್ವರ ಅವರು ನಿಧನರಾಗಿರುವ ಮಾಹಿತಿ ತಿಳಿದು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಗಾನ ಮಾಂತ್ರಿಕ, ಕರಾವಳಿ ಭಾಗದ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರರ ನಿಧನದ ಸುದ್ದಿ ನೋವುಂಟು ಮಾಡಿದೆ.ಸುದೀರ್ಘ 45 ವರ್ಷಗಳ ಕಾಲ ತಮ್ಮ ಕಂಠಸಿರಿಯ ಮೂಲಕ ಕಲಾರಸಿಕರನ್ನು ರಂಜಿಸಿದ್ದ ಧಾರೇಶ್ವರರು ಪ್ರಯೋಗಶೀಲ ಭಾಗವತಿಕೆಗೆ ಹೆಸರುವಾಸಿಯಾದವರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.