ನವದೆಹಲಿ, ಮಾ.13, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಗೆ ಘೋಷಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಈ ನಡುವೆ ಕಾಂಗ್ರೆಸ್ ಜೆಡಿಎಸ್ ಸೀಟು ಹಂಚಿಕೆ ಸಂಬಂಧ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮತ್ತು ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಅಲಿ ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ರಾಹುಲ್ ಗಾಂಧಿ ನಿವಾಸದಲ್ಲಿ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ.
ಇನ್ನು ಕ್ಷೇತ್ರಗಳ ಪಟ್ಟಿಯೊಂದಿಗೆ ರಾಹುಲ್ ಗಾಂಧಿ ಬಳಿ ತೆರಳಿರುವ ಡ್ಯಾನಿಶ್ ಅಲಿ ಈಗಾಗಲೇ 6 ಕ್ಷೇತ್ರಗಳ ವಿಷಯಗಳಲ್ಲಿ ಎರಡೂ ಪಕ್ಷಗಳಿಂದಲೂ ಒಪ್ಪಿಗೆ ಪಡೆದಿದ್ದಾರೆ ಎನ್ನಲಾಗಿದೆ. ಮಂಡ್ಯ, ಹಾಸನ, ಶಿವಮೊಗ್ಗ, ಬೆಂಗಳೂರು ಉತ್ತರ, ಉತ್ತರ ಕನ್ನಡ, ಬಿಜಾಪುರ ಕ್ಷೇತ್ರಗಳು ಜೆಡಿಎಸ್ ತೆಕ್ಕೆಗೆ ಬಿದ್ದಿವೆ. ಉಳಿದಂತೆ ಮೈಸೂರು ಮತ್ತು ಹಾಲಿ ಸಂಸದರಿರುವ ತುಮಕೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಕೂಡ ತಮಗೆ ಬಿಟ್ಟುಕೊಡುವಂತೆ ಜೆಡಿಎಸ್ ಕೇಳುತ್ತಿದೆ ಎನ್ನಲಾಗಿದೆ.