ಮಹದೇವಪುರ, ಸೆ. 7: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಮಹದೇವಪುರ ಕ್ಷೇತ್ರದ ವರ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ವರ್ತೂರು ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರ ಈ ಡಿ ಹಾಗೂ ಐಟಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಮುಖಂಡರನ್ನು ದಮನ ಮಾಡುತ್ತಿದೆ ಎಂದು ದೂರಿದರು. ಬಿಜೆಪಿ ಪಕ್ಷದ ವಿರುದ್ದ ಘೋಷಣೆ ಗಳನ್ನು ಕೂಗಿದ ಪ್ರತಿಭಟನಾಕಾರರು, ಡಿ.ಕೆ .ಶಿವಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ವರ್ತೂರು ರಸ್ತೆ ತಡೆದ ಹಿನ್ನೆಲೆಯಲ್ಲಿ ಕೆಲವೊತ್ತು ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಯಿತು. ಕಾರ್ಯಕರ್ತರಾದ ವರ್ತೂರು ಚಂದ್ರು, ಕೃಷ್ಣಪ್ಪ, ದೇವರಾಜ್ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.