ಬೆಂಗಳೂರು, ಡಿ. 12: ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದು, ಇನ್ನೂ ಅವರ ರಾಜೀನಾಮೆಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಕೊಂಡಿಲ್ಲ.
ಪಕ್ಷದ ಹಿರಿಯ ಮುಖಂಡರು ಇದೇ ಸಂದರ್ಭವನ್ನು ಬಳಸಿಕೊಂಡು ತಕ್ಷಣವೇ ರಾಜೀನಾಮೆ ಅಂಗೀಕರಿಸಿ, ಹೊಸಬರಿಗೆ ಅವಕಾಶ ನೀಡುವಂತೆ ಒತ್ತಾಯಿಸಲಿದ್ದಾರೆ. ಭಾರತ್ ಬಚಾವೊ ಆಂದೋಲನದ ನಂತರ ಸೋನಿಯಾ ಗಾಂಧಿ ಅವರನ್ನು ಭೇಟಿಮಾಡಿ ರಾಜ್ಯದಲ್ಲಿನ ಪಕ್ಷದ ಪರಿಸ್ಥಿತಿಯನ್ನು ವಿವರಿಸಲು ಹಿರಿಯ ಮುಖಂಡರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಆಂದೋಲನದ ಸಮಯದಲ್ಲೇ ಸಿಗುವ ಅವಕಾಶ ಬಳಸಿಕೊಂಡು ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ದಿನೇಶ್ ನೀಡಿರುವ ರಾಜೀನಾಮೆ ಅಂಗೀಕಾರಕ್ಕೂ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದ್ದು, ಅಧಿಕಾರ ಗಿಟ್ಟಿಸಿಕೊಳ್ಳಲು ಲಾಬಿ ಆರಂಭಿಸಿದ್ದಾರೆ. ತಮ್ಮ ನಾಯಕರ ಮೂಲಕ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್, ಕೆ.ಎಚ್.ಮುನಿಯಪ್ಪ, ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಕೃಷ್ಣ ಬೈರೇಗೌಡ ಅವರ ಹೆಸರುಗಳು ಕೇಳಿಬಂದಿವೆ. ಮಲ್ಲಿಕಾರ್ಜುನ ಖರ್ಗೆ ಹೆಸರೂ ಚಾಲ್ತಿಗೆ ಬಂದಿದೆ.