ಬೆಂಗಳೂರು: ಪ್ರಸ್ತುತ ಸಾಲಿನ ಬಜೆಟ್ನಲ್ಲಿ ರಾಜ್ಯ ಸರ್ಕಾರ ಭೂ ರಹಿತ ದಲಿತರಿಗೆ ಭೂಮಿ ಹಂಚಿಕೆ ಮಾಡುವುದೂ ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ(ಡಿಎಚ್ಎಸ್) ಸೇರಿದಂತೆ,
ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ
ಮುಖಂಡರು ವಿವಿಧ ಬೇಡಿಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಸಮಿತಿ ಸಂಚಾಲಕ ಎನ್. ನಾಗರಾಜ್, ಪ್ರತೀ ಗ್ರಾಮದಲ್ಲೂ ದಲಿತರಿಗೆ ಪ್ರತ್ಯೇಕ ರುದ್ರಭೂಮಿ ಮೀಸಲಿಡಬೇಕು. ಜೊತೆಗೆ, ದಲಿತರ ಸಾಲಮನ್ನಾ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ದಲಿತ ಕುಟುಂಬಗಳಿಗೆ ಕಡ್ಡಾಯವಾಗಿ 200
ದಿನಗಳ ಉದ್ಯೋಗ ಒದಗಿಸಬೇಕು.
ಬೇಸಾಯದಲ್ಲಿ ತೊಡಗಲು ಬಯಸುವ ಭೂರಹಿತ ದಲಿತರಿಗೆ ಭೂಮಿ ನೀಡಬೇಕು.
ಅದೇ ರೀತಿ, ಪ್ರತೀ ತಾಲೂಕಿನಲ್ಲೂ 500 ಎಕರೆ ಭೂಮಿ ಖರೀದಿಸಿ ಹಂಚಿಕೆ ಮಾಡಬೇಕು. ಪ್ರಸ್ತುತ ಸಾಲಿನಲ್ಲಿ ದಲಿತರಿಗೆ ಮೀಸಲಿಟ್ಟ ಅಭಿವೃದ್ಧಿ ಹಣ ಸಮರ್ಪಕವಾಗಿ ಜಾರಿಯಾಗಬೇಕು. ಜತೆಗೆ ಈ ಸಂಬಂಧ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅದೇರೀತಿ, ನಿವೇಶನ ರಹಿತ ದಲಿತರಿಗೂ 4 ಗುಂಟೆ ಭೂಮಿ ನೀಡಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯಿದೆ ರಾಜ್ಯ ವ್ಯಾಪ್ತಿ ಕಟ್ಟುನಿಟ್ಟಾಗಿ ಜಾರಿಯಾಗಬೇಕು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಯೋಜನೆ ಜಾರಿ ಮಾಡದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಬೇಕು.
ಈ ಬೇಡಿಕೆಗಳು ಈಡೇರಿಸದಿದ್ದಲ್ಲಿ, ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ದಲಿತ
ಹಕ್ಕುಗಳ ಸಮಿತಿಯ ಸಂಚಾಲಕರಾದ ಗೋಪಾಲಕೃಷ್ಣ ಹರಳಹಳ್ಳಿ, ಎನ್.ರಾಜಣ್ಣ,
ಹೆಚ್.ಜಿ.ನಾಗಣ್ಣ, ಮಾಯಶ್ರೀ, ರಾಜಶೇಖರ್ ಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.