ಬೆಂಗಳೂರು: ಜನರ ಆರೋಗ್ಯದ ಸಮಗ್ರ ಮಾಹಿತಿ ಕಲೆ ಹಾಕಲು ಬಿಬಿಎಂಪಿ ವೈದ್ಯರ ತಂಡ ಮನೆ ಬಾಗಿಲಿಗೇ ಬರಲಿದೆ. 27 ವಿಧಾನಸಭಾ ಕ್ಷೇತ್ರಗಳ 54 ವಾರ್ಡ್ಗಳಲ್ಲಿ ಅನುಷ್ಠಾನಗೊಳ್ಳುವ ಈ ಸಮೀಕ್ಷೆಗೆ ಕಂದಾಯ ಸಚಿವ ಆರ್.ಅಶೋಕ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಗರದಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ಈ ಆರೋಗ್ಯ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಕೊರೊನಾ ಸೋಂಕು ದೃಢಪಟ್ಟರೆ ತಕ್ಷಣ ಅವರಿಗೆ ಸೂಕ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಇದು ನೆರವಾಗಲಿದೆ.
‘ಪಾಲಿಕೆ ವೈದ್ಯರ ತಂಡವು ನಗರದ 29 ಲಕ್ಷ ಮನೆಗಳಿಗೂ ಹಂತ ಹಂತವಾಗಿ ಭೇಟಿ ನೀಡಿ, ಆ ಕುಟುಂಬಗಳ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಿದೆ. ಕುಟುಂಬದ ಸದಸ್ಯರು ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಮಧುಮೇಹ ಸೇರಿದಂತೆ ಇನ್ನಿತರೆ ರೋಗಗಳನ್ನು ಹೊಂದಿದ್ದರೆ, ಈ ಕುರಿತ ಮಾಹಿತಿಯನ್ನು ಕಲೆ ಹಾಕಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ, ವಿಶೇಷ ಆಯುಕ್ತರುಗಳಾದ ಡಿ.ರಂದೀಪ್, ತುಳಸಿ ಮದ್ದಿನೇನಿ, ಹರೀಶ್ ಕುಮಾರ್, ಮನೋಜ್ ಜೈನ್, ದಯಾನಂದ್, ರವೀಂದ್ರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.