ತುಮಕೂರು: ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಗೆ ಈ ಬಾರಿ ಭಾರತ ರತ್ನ ಪ್ರಶಸ್ತಿ ಘೋಷಣೆಯಾಗದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರದಲ್ಲಿ ನಮಗೆ ಅಧಿಕಾರ ಸಿಕ್ಕಿದರೆ ಸ್ವಾಮೀಜಿಗೆ ಭಾರತ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಗುರುವಾರ ತುಮಕೂರಿನಲ್ಲಿ ಡಾ.ಶಿವಕುಮಾರ ಸ್ವಾಮೀಜಿಯ ಪುಣ್ಯ ಸ್ಮರಣೆಯ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರೀಗಳು ನಮಗೆಲ್ಲಾ ದಾರಿದೀಪವಾಗಿದ್ದರು. ಅವರೊಬ್ಬ ಪವಾಡ ಪುರುಷ ಎಂದರು.
ನಡೆದಾಡುವ ದೇವರಾಗಿದ್ದ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಟ್ಟ ನಾನೇ ಪುಣ್ಯವಂತ ಎಂದ ಅವರು, ಶ್ರೀಗಳ ಬದುಕು ನಮಗೆ ಆದರ್ಶಪ್ರಾಯವಾಗಬೇಕು. ಶ್ರೀಗಳಿಗೆ ಭಾರತ ರತ್ನ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿದೆ. ಮುಂದಿನ ಚುನಾವಣೆಯಲ್ಲಿ ನಮಗೆ ಕೇಂದ್ರದಲ್ಲಿ ಅಧಿಕಾರ ಸಿಕ್ಕರೆ ಶ್ರೀಗಳಿಗೆ ಖಂಡಿತವಾಗಿಯೂ ಭಾರತ ರತ್ನ ಪ್ರಶಸ್ತಿ ಘೋಷಿಸುವುದಾಗಿ ಭರವಸೆ ನೀಡಿದರು.