ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಸರ್ವರಿಗೂ ಸೂರು ಯೋಜನೆಯಡಿ ಕೆ.ಆರ್. ಪುರಂ ನಗರೇಶ್ವರ ನಾಗೇನಹಳ್ಳಿಯಲ್ಲಿ ನಿರ್ಮಿಸಿರುವ 36789 ಮನೆಗಳ ಹಂಚಿಕೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿಯಾಗಿದ್ದರು.
ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾ.7 ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದರು.
ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನೀಗಿಸಲಾಗುವುದು. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಇನ್ನು ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕ ಬೈರತಿ ಬಸವರಾಜ್, ರಾಜ್ಯ ಯೋಜನೆ ಆಯೋಗದ ಉಪಾಧ್ಯಕ್ಷ ಪ್ರೊ. ರಾಜೀವ್ ಗೌಡ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ್ ಅಬ್ಬಯ್ಯ, ಮೇಲ್ಮನೆ ಸದಸ್ಯ ಪುಟ್ಟಣ್ಣ ಮತ್ತಿತರರು ಪಾಲ್ಗೊಂಡರು.