ಬೆಂಗಳೂರು, ಡಿ. 16 : ಕಣ್ಣಿನ ಚಿಕಿತ್ಸೆಗೊಳಗಾಗಿದ್ದ ತಮಿಳುನಾಡು ಮೂಲದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಬಾಲಕನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಂಕರ್ (8) ಮೃತ ಬಾಲಕ. ಈ ಸಂಬಂಧ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ಕಣ್ಣಿನ ಶಸ್ತ್ರ ಚಿಕಿತ್ಸೆಯಿಂದ ಪ್ರಾಣ ಹೋಗುವ ಸಾಧ್ಯತೆಗಳೇ ಇಲ್ಲ. ಶಸ್ತ್ರಚಿಕಿತ್ಸೆಗೂ ಮೊದಲು ನೀಡಲಾಗಿದ್ದ ಅನಸ್ತೇಷಿಯಾ ಪ್ರಮಾಣದಲ್ಲಿವ್ಯತ್ಯಾಸ ಆಗಿದ್ದರಿಂದಲೇ ಸಾವು ಸಂಭವಿಸಿದೆ ಎಂದು ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಲಗಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಶಂಕರ್ಗೆ ತಮಿಳುನಾಡಿನ ಧರ್ಮಪುರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲಿನ ವೈದ್ಯರು ಶಸ್ತ್ರ ಚಿಕಿತ್ಸೆಗಾಗಿ ಬೆಂಗಳೂರಿನ ವೈದ್ಯರ ಬಳಿ ಹೋಗುವಂತೆ ಸೂಚಿಸಿದ್ದರು. ಹೀಗಾಗಿ, ಶಂಕರ್ ಪೋಷಕರು ಬಾಗಲಗುಂಟೆ ಸನಿಹದ ಖಾಸಗಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗಾಗಿ ದಾಖಲಿಸಿದ್ದರು.