ಬೆಂಗಳೂರು, ಮೇ. 9, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ ದೋಸ್ತಿ ಸರ್ಕಾರ ಬಂದ ದಿನದಿಂದಲೂ ಕೂಡ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುಇತ್ತಲೇ ಇವೆ. ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ವಿಷಯ ಕುರಿತಾಗಿ ಮಾಹಿತಿಯೊಂದನ್ನು ತಿಳಿಸಿದ್ದಾರೆ.
ರೈತರ ಸಾಲಮನ್ನ ಕುರಿತು ಯೋಜನೆಯ ಅನುಸಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು. ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ 1.5 ಲಕ್ಷ ರೈತರ 900 ಕೋಟಿ ಸಾಲಮನ್ನಾ ಮೊತ್ತ ಬಿಡುಗಡೆಯಾಗಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ ಸಾಲಮನ್ನಾ ಕುರಿತು ಗಂಭೀರ ಚಿಂತನೆ ನಡೆಸಿದ್ದು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 2018ರ ಡಿಸೆಂಬರ್ ತಿಂಗಳಿನಿಂದ ರೈತರ ಸಾಲವನ್ನು ಹಂತಹಂತವಾಗಿ ಅವರ ಖಾತೆಗೆ ಭರ್ತಿ ಮಾಡಲಾಗುತ್ತಿದೆ. ಈವರೆಗೆ ಸಹಕಾರ ಸಂಘಗಳ 8.3 ಲಕ್ಷ ರೈತರಿಗೆ 3500 ಕೋಟಿ ರೂ. ಸಾಲ ಮನ್ನಾ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಸಹಕಾರ ಸಂಘಗಳಲ್ಲಿ ರೈತರು ನಿಯಮಾವಳಿಗಳಂತೆ ಅರ್ಹತೆ ಪಡೆದ ದಿನದಂದು ಅವರ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ ಕುಮಾರಸ್ವಾಮಿಯವರಿಗೆ ಸಂಪೂರ್ಣ ವಿವರ ನೀಡಿದ್ದಾರೆ. ಒಟ್ಟಿನಲ್ಲಿ ಈಗಾಗಲೇ ಕೆಲವು ರೈತರ ಸಾಲಮನ್ನಾ ಆಗಿದ್ದು ಇನ್ನೂ ಸಾಕಷ್ಟು ಜನ ರೈತರ ಸಾಲ ಮನ್ನಾ ಬಾಕಿಯಿದೆ. ಅದನ್ನು ಕೂಡ ಅತೀ ಶೀಘ್ರದಲ್ಲಿ ಮನ್ನಾ ಮಾಡುತ್ತೇವೆ ಎಂದು ತಿಳಿಸಿದ್ದಾರೆ.