ಮೈಸೂರು, ನ. 18: ಮಾಜಿ ಸಚಿವ, ಹಾಲಿ ಶಾಸಕ ತನ್ವೀರ್ ಸೇಠ್ ಮೇಲೆ ಭಾನುವಾರ ರಾತ್ರಿ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಸದ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇನ್ನೂ 48 ಘಂಟೆಗಳ ಕಾಲ ಅವರ ಆರೋಗ್ಯದ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ ಅಂತ ವೈದ್ಯರು ಹೇಳಿದ್ದಾಶರೆ ಎನ್ನಲಾಗಿದೆ.
ಇಂದು ಬೆಳಗ್ಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆ ತನ್ವೀರ್ ಸೇಠ್ ಆರೋಗ್ಯದ ಕುರಿತು ಬುಲೆಟಿನ್ ಬಿಡುಗಡೆ ಮಾಡಿದೆ. “ತನ್ವೀರ್ ಕುತ್ತಿಗೆ ಭಾಗದಲ್ಲಿ ಗಾಯವಾಗಿದ್ದು, ಮೆದುಳು ಹಾಗೂ ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳಿಗೆ ಹಾನಿ ಉಂಟಾಗಿದೆ. ಹಾಗಾಗಿ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ. ಇನ್ನು, 48 ಗಂಟೆ ಕಾಲ ಏನನ್ನೂ ಹೇಳಲಾಗುವುದಿಲ್ಲ,” ಎಂದು ವೈದ್ಯರು ತಿಳಿಸಿದ್ದಾರೆ.
“ಒಳಗಿನ ನರಗಳು, ಸ್ಪೈನಲ್ಗೆ ಯಾವ ರೀತಿ ಹಾನಿಯಾಗಿದೆ ಎಂಬುದು ಮುಂದಿನ ಹಂತದ ಚಿಕಿತ್ಸೆಯಲ್ಲಿ ತಿಳಿಯಲಿದೆ. ರಾತ್ರಿ ರಕ್ತಸ್ರಾವಾಗದ ರೀತಿ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕಿಡ್ನಿ ಸ್ವಲ್ಪ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದೆ. ಬಿಪಿ, ಶುಗರ್ ಸಾಮಾನ್ಯ ಸ್ಥಿತಿಗೆ ತರಲು ಪ್ರಯತ್ನ ಪಡುತ್ತಿದ್ದೇವೆ. ಅದರ ಹೊರತಾಗಿ ಯಾವುದೇ ರೀತಿಯ ಆರೋಗ್ಯ ಏರುಪೇರಿಲ್ಲ. ಜನರು ಪ್ರಾರ್ಥನೆ ಮಾಡಲಿ. ಅವರು ಆಸ್ಪತ್ರೆಗೆ ಬರುವುದು ಬೇಡ,” ಎಂದು ಆಸ್ಪತ್ರೆಯ ವೈದ್ಯರು ಕೋರಿದ್ದಾರೆ.