ದೇವನಹಳ್ಳಿ, ಸೆ. 14: ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ, ಅದನ್ನು ಸಮಾನವಾಗಿ ಸ್ವೀಕರಿಸಬೇಕು. ಇದಕ್ಕಿಂತಲೂ ಮುಖ್ಯವಾಗಿ ಕ್ರೀಡೆಯಲ್ಲಿ ಭಾಗವಹಿಸುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಚನ್ನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಟ್ಟದ 14/17ವರ್ಷದ ವಯೋಮಿತಿಯ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾವಳಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಜ್ಞಾನಾರ್ಜನೆ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲೂ ವಿದ್ಯಾರ್ಥಿಗಳು ತೊಡಗಿಸುತ್ತಾ ಬಂದಿದೆ. ಕ್ರೀಡಾ ಕ್ಷೇತ್ರದಲ್ಲಿ ಮಕ್ಕಳ ನೈಜ್ಯ ಆಟವನ್ನು ವೀಕ್ಷಿಸಿ ಕ್ರೀಡಾಪಟುಗಳನ್ನು ಬೆಂಬಲಿಸಬೇಕಿದೆ. ಕ್ರೀಡೆ ವಿದ್ಯಾರ್ಥಿಗಳ ಬದುಕನ್ನು ಉತ್ತಮ ಪಡಿಸುವ ಶಕ್ತಿಯನ್ನು ಹೊಂದಿದೆ.
ಕಬಡ್ಡಿ ಗ್ರಾಮೀಣ ಪ್ರದೇಶದ ಆಟವಾಗಿದೆ. ಕಬಡ್ಡಿಗೆ ಹೆಚ್ಚಿನ ಶಕ್ತಿ ಇದೆ. ಚನ್ನಹಳ್ಳಿ ಸರ್ಕಾರಿ ಪ್ರೌಢಶಾಲೆ ಆಟದ ಮೈದಾನ ಹೆಚ್ಚು ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಕಬಡ್ಡಿ ಕ್ರೀಡಾಕೂಟ ಮಾಡಲು ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು. ಸಿಎಸ್ಆರ್ ಅನುದಾನ ಒದಗಿಸಿಕೊಡಲು ಪ್ರಯತ್ನ ಮಾಡಲಾಗುವುದು ಎಂದರು.
ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗಿದೆ. ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೋಳ್ಳಬೇಕು ಎಂದು ಹೇಳಿದರು.
ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ಚನ್ನಹಳ್ಳಿ ಪ್ರೌಢಶಾಲೆಯ ಆಟದ ಮೈಧಾನ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜಾಗವಿರುವ ಮೈದಾನವಾಗಿದೆ. ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಇದನ್ನು ಉಳಿಸಲಾಗಿದೆ. ಎಲ್ಲರ ಪರಿಶ್ರಮ ಹೆಚ್ಚು ಇದೆ. ಕಬಡ್ಡಿ, ಹಾಕಿ, ಬ್ಯಾಸ್ಕೆಟ್ಬಾಲ್ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಚನ್ನರಾಯಪಟ್ಟಣ ಯಾವುದರಲ್ಲೂ ಕಡಿಮೆ ಇಲ್ಲ ಎಂದು ತೋರಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವಾಗಬೇಕು. ಶಾಲೆಗೆ ಕಂಪೌಂಡ್ ವ್ಯವಸ್ಥೆಗೆ ಪ್ರಯತ್ನ ಮಾಡಲಾಗುವುದು ಎಂದರು.
ಜಿಪಂ ಸದಸ್ಯ ಲಕ್ಷ್ಮಿನಾರಾಯಣ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಸಾಧ್ಯ. ಕಬಡ್ಡಿ ಕ್ರೀಡೆಯನ್ನು ಉಳಿಸಿಬೆಳೆಸಬೇಕು. ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿದರೆ ಕ್ರೀಡೆಗಳಲ್ಲಿ ಯಶಸ್ಸು ಸಾಧಿಸಬಹುದು ಎಂದರು.
ಈ ವೇಳೆಯಲ್ಲಿ ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ, ತಾಪಂ ಅಧ್ಯಕ್ಷೆ ಚೈತ್ರಾ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಭಾರತಿ, ಆರ್.ಎ.ಮುನೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ರಾಧಕೃಷ್ಣ, ಗ್ರಾಪಂ ಅಧ್ಯಕ್ಷ ಪ್ರಭಾಕರ್, ಜಿಪಂ ಮಾಜಿ ಅಧ್ಯಕ್ಷೆ ಮಂಜುಳಾದೇವಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮುನಿರಾಜು, ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಚನ್ನರಾಯಪಟ್ಟಣ ಹೋಬಳಿ ಜೆಡಿಎಸ್ ಅಧ್ಯಕ್ಷ ಮುನಿರಾಜು, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಹುಸೇನ್, ಬಿಇಒ ಗಾಯಿತ್ರಿ ದೇವಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅಶ್ವತ್ ನಾರಾಯಣಸ್ವಾಮಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜನಾರ್ಧನ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮಾರುತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮುನಿಯಪ್ಪ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಮತ್ತಿತರರು ಇದ್ದರು.