ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲು ಇಂದು ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸಿಕೊಡಲಾಗುವುದು. ದರ್ಶನಕ್ಕೆ ಯಾವ ಅಡಚಣೆಯಾಗದಂತೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆಯಾದ ಹಾಸನಾಂಬೆ ದರ್ಶನಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕಳೆದ ವರ್ಷ ಅಕ್ಟೋಬರ್ 27ಕ್ಕೆ ಬಂದ್ ಆಗಿದ್ದ ದೇಗುಲದ ಬಾಗಿಲು, ಇಂದು ತೆರೆಯಲಿದೆ.
ಪ್ರತಿ ವರ್ಷ ಅಶ್ವಯುಜ ಮಾಸದ ಮೊದಲ ಗುರುವಾರ ಬಾಗಿಲು ತೆಗೆಯುವುದು ವಾಡಿಕೆ. ಹಾಗಾಗಿಯೇ ನಾಳೆ ಆಧಿಚುಂಚನಗಿರಿ ಮಹಾ ಸಂಸ್ಥಾನ ಪೀಠದ ಪೀಠಾದ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಶ್ರೀಗಳ ಸಾನ್ನಿಧ್ಯದಲ್ಲಿ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಅವರ ಉಪಸ್ಥಿತಿಯಲ್ಲಿ ನಾಳೆ ದೇಗುಲದ ಬಾಗಿಲು ತೆರೆಯಲಿದೆ.
ಈ ಬಾರಿ ಶಕ್ತಿಯೋಜನೆಯ ಎಫೆಕ್ಟ್ ಕಾರಣದಿಂದ ಮಹಿಳೆಯರಿಗೆ ಸಾರಿಗೆ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರುವುದರಿಂದ ಅತೀ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ 10 ರಿಂದ 12 ಲಕ್ಷ ಭಕ್ತರು ಬರಬಹುದು ಎನ್ನುವ ನಿರೀಕ್ಷೆ ಇದ್ದು, ಅದಕ್ಕಾಗಿ ಸಕಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಸುಮಾರು 10 ಕಿಲೋಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ, ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ನೆರಳಿನ ವ್ಯವಸ್ಥೆ, ಗಣ್ಯರು ಅತಿ ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ದೇಗುಲಕ್ಕೆ ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಇಡೀ ದೇಗುಲದ ಆವರಣ ನಳ ನಳಿಸುತ್ತಿದೆ.