ಹಾವೇರಿ, ಅ. 20 : ಜಿಲ್ಲೆಯ ವಿವಿಧೆಡೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ ರಸ್ತೆ ಸಂಪರ್ಕ ಕಡಿತ, ಸಂಚಾರ ಅಸ್ತವ್ಯಸ್ತದಿಂದ ಜನ-ಜೀವನ ದುರಸ್ತವಾಗಿದೆ.
ಭಾರೀ ಮಳೆ ಸುರಿದ ಪರಿಣಾಮ ಬಾಜಿರಾಮನಹಳ್ಳ ತುಂಬಿ ಹರಿಯುತ್ತಿದೆ. ಮಾರನಬೀದಿ, ನೀರಲಗಿ ಸೇರಿದಂತೆ ಹಲವಾರು ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತ್ತಗೊಂಡಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಹಾನಗಲ್ಲ ತಾಲೂಕಿನಲ್ಲಿ ವರುಣನ ಆರ್ಭಟಕ್ಕೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಲಗಳಿಗೆ ನೀರು ನುಗ್ಗಿ ಲಕ್ಷಾಂತರ ಬೆಳೆ ನಷ್ಟವಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡು ಜನರು ಪರದಾಡುವಂತಾಗಿದೆ. ಈಗಾಗಲೇ ಉತ್ತರ ಕರ್ನಾಟಕ ಭಾಗದ ಜನರು ಭಾರೀ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ್ದು, ಈಗ ಮತ್ತೆ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ.