ಬೆಂಗಳೂರು, ಏ. 18, ನ್ಯೂಸ್ ಎಕ್ಸ್ ಪ್ರೆಸ್: ಇಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 15,000 ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದರು.
ಕುಟುಂಬ ಸಮೇತ ಡಾಲರ್ಸ್ ಕಾಲೋನಿಯ ಗೋಪಾಲ್ರಾಮ್ ನಾರಾಯಣ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿ ಬಂದ ನಂತರ ಅವರು ಈ ಆರೋಪ ಮಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಲ್ಲಿ ಬಿಬಿಎಂಪಿ ಅಧಿಕಾರಿಗಳು ಎಡವಿದ್ದಾರೆ. ಅವರ ವೈಫಲ್ಯದ ಫಲವೇ ನಕಲಿ ಮತದಾರರ ಸೇರ್ಪಡೆಯಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಒಂದು ಕೋಮಿನ ವರ್ಗದ ನಕಲಿ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ನಕಲಿ ಮತದಾರರೊಬ್ಬರ ಹೆಸರನ್ನು ನಾರಾಯಣಸ್ವಾಮಿಪ್ರದರ್ಶಿಸಿದರು.