ದೇವನಹಳ್ಳಿ, ಅ. 11: ಹೆಚ್.ಐ.ವಿ. ಸೋಂಕಿತರನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿ, ಸಾಮಾಜಿಕ ಸವಲತ್ತುಗಳನ್ನು ಒದಗಿಸುವ ಮೂಲಕ ಅವರ ಜೀವನ ಮಟ್ಟವನ್ನು ಸುಧಾರಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.
ತಾಲೂಕಿನ ಚಪ್ಪರದ ಕಲ್ಲು ಸರ್ಕಲ್ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಹೆಚ್.ಐ.ವಿ. ಸೋಂಕಿತ/ ಭಾದಿತರಿಗೆ ಸಾಮಾಜಿಕ ಸವಲತ್ತುಗಳನ್ನು ದೊರಕಿಸಿಕೊಡುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾರತಮ್ಯ ಮತ್ತು ದೌರ್ಜನ್ಯಕ್ಕೊಳಗಾಗಿ ಮಾನಸಿಕವಾಗಿ ನೊಂದಿರುವ ಹೆಚ್ಐವಿ ಸೋಂಕಿತರಿಗೆ ಮನೋಸ್ಥೈರ್ಯ ತುಂಬಿ, ಆರೈಕೆ ಮತ್ತು ಬೆಂಬಲ ನೀಡುವ ಮೂಲಕ ಎಲ್ಲರಂತೆ ಜೀವನ ನಡೆಸಲು ಅನುವು ಮಾಡಿಕೊಡಬೇಕು.
ಹೆಚ್ಐವಿ ಸೋಂಕಿತರು ಉತ್ತಮ ದಿನಚರಿಯನ್ನು ಅಳವಡಿಸಿಕೊಂಡು ಅನುಸರಿಸಿ, ಸ್ವಯಂ ಪ್ರೇರಣೆಯಿಂದ ಚಿಕಿತ್ಸೆ ಪಡೆಯುವಂತೆ ಉತ್ತೇಜಿಸಬೇಕು ಹಾಗೂ ಅವರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಮಾಹಿತಿ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್.ಐ.ವಿ. ಸೋಂಕಿತರ/ಬಾಧಿತ/ ದಮನಿತ ಮಹಿಳೆಯರು/ ಲೈಂಗಿಕ ಅಲ್ಪಸಂಖ್ಯಾತರನ್ನು ಗುರುತಿಸಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ಲಭ್ಯವಿರುವ ಸಾಮಾಜಿಕ ಸವಲತ್ತುಗಳಾದ ಅನ್ನ ಅಂತ್ಯೋದಯ ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ವ್ಯಕ್ತಿಗಳಿಗೆ 35 ಕೆ.ಜಿ.ಆಹಾರ ಧಾನ್ಯಗಳ ವಿತರಣೆ, ಕಾಬಾ ಯೋಜನೆ ವಿಶೇಷ ಪಾಲನಾ ಯೋಜನೆಯಡಿ 18 ವರ್ಷ ವಯಸ್ಸಿಗಿಂತ ಕಡಿಮೆ ಇರುವ ಮಕ್ಕಳಿಗೆ ತಿಂಗಳಿಗೆ 650 ರಿಂದ 750 ರೂ. ವರಿಗೆ ನೇರವಾಗಿ ಇವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು . ರಾಜೀವ್ ಗಾಂಧಿ ವಸತಿ ಯೋಜನೆಯಡಿ ವಸತಿಗಳನ್ನು ನಿರ್ಮಿಸಿ ಕೊಡಲಾಗುವುದು. ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಆಸ್ವತ್ರೆಗಳಲ್ಲಿ ಉಚಿತವಾಗಿ ರಕ್ತ ಪರೀಕ್ಷೆಗಳು ಮತ್ತು ಸೂಕ್ತ ಚಿಕಿತ್ಸೆಗಳನ್ನು ನೀಡಲಾಗುವುದು.
ಕಡ್ಡಾಯ ಶಿಕ್ಷಣ ಹಕ್ಕು ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಎಲ್.ಕೆ.ಜಿಗೆ ಉಚಿತವಾಗಿ ನೋಂದಾವಣೆ ಮತ್ತು ಉನ್ನತ ಶಿಕ್ಷಣಕ್ಕೆ ಅಗತ್ಯವಿರುವ ವಿದ್ಯಾರ್ಥಿ ವೇತನ ಒದಗಿಸಲಾಗುವುದಲ್ಲದೇ, ಮಹಿಳಾ ಅಭಿವೃದ್ದಿ ನಿಗಮದಿಂದ ಧನಶ್ರೀ ಯೋಜನೆಯಡಿ ಮಹಿಳೆಯರಿಗೆ 50 ಸಾವಿರ ರೂಗಳನ್ನು ಸಾಲದ ರೂಪದಲ್ಲಿ ಮತ್ತು 10 ಸಾವಿರ ಸಬ್ಸಿಡಿ ರೂಪದಲ್ಲಿ ನೀಡಲಾಗುವುದು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನ್ಯಾಯಲಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಯಾವುದೇ ಶುಲ್ಕವನ್ನು ನೀಡದೇ ಬಗೆಹರಿಸಿಕೊಳ್ಳುವ ಅವಕಾಶವಿದ್ದು, ಇನ್ನೂ ಮುಂತಾದ ಸಾಮಾಜಿಕ ಸವಲತ್ತುಗಳನ್ನು ಹೆಚ್.ಐ.ವಿ ಸಮುದಾಯ ಇದರ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ಸಾಗಿಸಬೇಕು ಹಾಗೂ ಜಿಲ್ಲೆಯಲ್ಲಿ ಹೆಚ್.ಐ.ವಿ. ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಸೊನ್ನೆಗೆ ತನ್ನಿ ಎಂದು ತಿಳಿಸಿದರು.
ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್.ಐ.ವಿ ಬಗ್ಗೆ ಜಾಗೃತಿ ಮೂಡಿಸಿ ಮತ್ತು ಸ್ಚ-ಇಚ್ಛೆ ರಕ್ತ ದಾನಕ್ಕೆ ಮುಂದಾಗಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಲ್ಲದೇ ಹೆಚ್.ಐ.ವಿ ಪಲ್ಸ್ ಆಫ್ನ ಮುಂಖಾತರ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಶಕೀಲಾ.ಎಲ್, ಸಾರ್ವಜನಿಕ ಮತ್ತು ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಯ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಯ ಅಧಿಕಾರಿಗಳು ಮತ್ತಿತರರು ಇದ್ದರು.