ಬೆಂಗಳೂರು: ‘ನೇಹಾ ಹತ್ಯೆ ಪ್ರಕರಣದಲ್ಲಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪೋಷಕರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು, ಗೃಹ ಸಚಿವ ಜಿ. ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು. ಕೆಲ ಗಂಟೆಗಳ ಬಳಿಕ ಎಲ್ಲರನ್ನೂ ಬಿಟ್ಟು ಕಳುಹಿಸಿದ್ದಾರೆ.
ನಗರದಲ್ಲಿರುವ ಗೃಹ ಸಚಿವರ ಮನೆ ಎದುರು ಬೆಳಿಗ್ಗೆ ಸೇರಿದ್ದ ಪ್ರತಿಭಟನಕಾರರು, ‘ನೇಹಾ ಹತ್ಯೆ ಆಕಸ್ಮಿಕವೆಂದು ಹೇಳಿರುವ ಗೃಹಸಚಿವರು ತಮ್ಮ ಹೇಳಿಕೆ ಹಿಂಪಡೆದು, ಕುಟುಂಬದವರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.
‘ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತವಾಗಿ ಮುಗಿಸಬೇಕು. ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಿ, ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು. ನೊಂದ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ತಿಳಿಸಿದರು.