ಬೆಂಗಳೂರು, ಜು. 18 : ವಿದ್ಯಾರ್ಥಿ ನಿಲಯಗಳಲ್ಲಿ ಅರ್ಹ ಪ್ರತಿಭಾವಂತರಿಗೆ ಪ್ರವೇಶ ಕಲ್ಪಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆಯಕ್ತ ವಿ. ಅನ್ಬುಕುಮಾರ್ ಸುತ್ತೋಲೆ ಹೊರಡಿಸಿ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಇಂದು ಪತ್ರಿಕೆಯೊಂದಿಗೆ ಮಾತನಾಡಿ ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಿದ್ದು, ಸೂಕ್ತ ಕ್ರಮಕ್ಕೆ ಸುತ್ತೋಲೆ ಹೂರಡಿಸಿರುವುದಾಗಿ ತಿಳಿಸಿದ್ದಾರೆ.
ಪ್ರವೇಶ ಬಯಸಿ ಅರ್ಜಿ ಸಲ್ಲಿಸಿರುವ ಅರ್ಹರನ್ನು ದಾಖಲು ಮಾಡಿಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ ಪ್ರವೇಶಾತಿಗೆ ವಿದ್ಯಾರ್ಥಿಗಳ ಹೆಚ್ಚಳ ಹಾಗೂ ಹೊಸ ವಿದ್ಯಾರ್ಥಿನಿಲಯಗಳ ಆರಂಭಕ್ಕೆ ಸರ್ಕಾರದ ಮಟ್ಟದಲ್ಲಿ ಪರಶೀಲನೆ ನಡೆಯುತ್ತಿದೆ ಎಂದರು.
ಈ ಹಿಂದೆ ಕೆಲವು ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಮಂಜೂರಾತಿಗಿಂತ ಹೆಚ್ಚು ಪ್ರವೇಶ ಕಲ್ಪಿಸಲಾಗಿತ್ತು. ಹೆಚ್ಚಿನ ಪ್ರವೇಶಾತಿಯಿಂದ ಅನಾನುಕೂಲ ಎದುರಾಗಿ ಹಲವಾರು ದೂರುಗಳು ದಾಖಲಾದವು.
ಹೀಗಾಗಿ ಮಂಜೂರಾತಿ ಸಂಖ್ಯೆಗಿಂತ ಹೆಚ್ಚು ಪ್ರವೇಶ ಕಲ್ಪಿಸದಂತೆ ಸ್ಪಷ್ಟ ಸೂಚನೆ ನೀಡಿರುವುದಾಗಿ ತಿಳಿಸಿದರು.
ಹಾಸ್ಟೆಲ್ ಪ್ರವೇಶ ಪ್ರಸ್ತುತ ಆನ್ ಲೈನ್ ಮೂಲಕ ನಡೆಯುತ್ತಿದೆ. ಸಮಾಜ ಕಲ್ಯಾ ಇಲಾಖೆಯ ಒಟ್ಟು 636 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನಿರ್ವಹಣೆ ಮಾಡುತ್ತಿದ್ದು, ಈ ಪೈಕಿ 121 ವಿದ್ಯಾರ್ಥಿ ನಿಲಯಗಳಲ್ಲಿ ಕಡಿಮೆ ವಿದ್ಯಾರ್ಥಿಗಳು ದಾಖಲಾತಿ ಕಡಿಮೆ ಇದೆ ಎಂದು ತಿಳಿಸಿದ್ದಾರೆ.