ಬೆಂಗಳೂರು: ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ one to one ಪ್ರಗತಿ ಪರಿಶೀಲನೆ ನಡೆಸ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿ ಆಯುಕ್ತರುಗಳಿಗೆ ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದರು.
ಇಂದು ಸಿಎಂ ಅಧ್ಯಕ್ಷತೆಯಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, 2024-25 ನೇ ಸಾಲಿನಲ್ಲಿ ಒಟ್ಟು ಗುರಿ ರೂ. 1,10,000 ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್ ಅಂತ್ಯದವರೆಗೆ ಒಟ್ಟು ರೂ. 58,773 ಕೋಟಿ ಸಂಗ್ರಹಿಸಲಾಗಿದ್ದು, ಇದರಲ್ಲಿ ಜಿಎಸ್ಟಿ ರೂ. 44,783 ಕೋಟಿ, ಕೆಎಸ್ಟಿ ರೂ. 13,193 ಕೋಟಿ, ವೃತ್ತಿ ತೆರಿಗೆ ರೂ. 797 ಕೋಟಿ ಸೇರಿದೆ ಎಂದರು.
ಅಕ್ಟೋಬರ್ ಕೊನೆಯವರೆಗೆ ಶೇ.53.5 ಗುರಿ ಸಾಧನೆಯಾಗಿದೆ. 2023-24ನೇ ಸಾಲಿಗೆ ಹೋಲಿಸಿದರೆ ರೂ.5,957 ಕೋಟಿ ಹೆಚ್ಚುವರಿ ಸಂಗ್ರಹವಾಗಿರುತ್ತದೆ. ಮುಂದಿನ ಐದು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳು ರೂ.10200ಕೋಟಿ ತೆರಿಗೆ ಸಂಗ್ರಹ ಗುರಿಯನ್ನು ಇರಿಸಿ ಮಾರ್ಚ್ ಒಳಗಾಗಿ ಗುರಿಯನ್ನು ಸಾಧಿಸಬೇಕು. ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಗುರಿ ಸಾಧನೆ ಸಾಧ್ಯ. ರಾಜ್ಯದ ಅಭಿವೃದ್ಧಿಗೆ ತೆರಿಗೆ ಸಂಗ್ರಹದಲ್ಲಿ ಗುರಿಯನ್ನು ಸಾಧಿಸಬೇಕಿದೆ ಎಂದರು.
ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ. ನಿಗದಿತ ಗುರಿಯನ್ನು ಸಾಧಿಸದ ಅಧಿಕಾರಿಗಳನ್ನು ಹೊಣೆಗಾರ ಮಾಡಲಾಗುವುದು. ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆಯಾಗಲೇ ಬಾರದು. ಕರ ಸಮಾಧಾನ ಯೋಜನೆ ಅಡಿ ರೂ. 2ಸಾವಿರ ಕೋಟಿ ಹೆಚ್ಚುವರಿ ಸಂಗ್ರಹಣೆಯ ನಿರೀಕ್ಷೆಯಿದೆ ಎಂದರು.