ಕೋಲಾರ: ಜಿಲ್ಲೆಯ ರೈತರು ವಿವಿಧ ರೀತಿಯ ಬೆಳೆಗಳನ್ನು ಬೆಳೆಯುವ ಮೂಲಕ ಇತರೆ ಜಿಲ್ಲೆಯ ರೈತರಿಗೆ ಹಾಗೂ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ಕೃಷಿ ಸಚಿವರಾದ ಬಿ ಸಿ ಪಾಟೀಲ್ ತಿಳಿಸಿದರು.
ಕೃಷಿ ಇಲಾಖೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕೋಲಾರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕಛೇರಿಯ ಉದ್ಘಾಟನಾ ಸಮಾರಂಭ ಮತ್ತು ಆತ್ಮ ಯೋಜನೆಯಡಿ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿ ಮಾತನಾಡಿದರು ಈ ಕಟ್ಟಡವನ್ನು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಕಳೆದ ವರ್ಷಕ್ಕಿಂತ ಈ ವರ್ಷ ಉತ್ತಮ ಮಳೆಯಾಗಿದೆ ಶೇ ೧೫ ರಷ್ಟು ಬಿತ್ತನೆಯಾಗಿದೆ ಎಂದರು.
ರೈತರ ಹಿತದೃಷ್ಟಿಯಿಂದ ಸರ್ಕಾರವು ವಿವಿಧ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ ಎಲ್ಲಾ ಯೋಜನೆಗಳ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಲ್ಲಾ ಸಭೆ ಸಮಾರಂಭಗಳಲ್ಲಿ ಕೋಲಾರ ಜಿಲ್ಲೆಯ ರೈತರನ್ನು ನೆನೆಯುತ್ತೇನೆ. ಕಳೆದ ವಾರ ಮಂಡ್ಯ ಜಿಲ್ಲೆಯಲ್ಲಿ ಒಂದು ದಿನದ ಕಾಲ ಬಿತ್ತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಎಂದರು.
ಅಬಕಾರಿ ಸಚಿವರು ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ಮಾತನಾಡಿ, ಈ ವರ್ಷ ಉತ್ತಮ ಮಳೆಯಾಗಿದ್ದು ಜಿಲ್ಲೆಯಲ್ಲಿ ರೈತರು ಉತ್ತಮ ಬೆಳೆಗಳನ್ನು ಬೆಳೆದಿದ್ದಾರೆ. ಜಿಲ್ಲೆಯ ಹಲವಾರು ಕೆರೆಗಳು ಈಗಾಗಲೇ ತುಂಬಿವೆ, ಕೃಷಿ ಇಲಾಖೆಯಿಂದ ವಿವಿಧ ರೀತಿಯ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಈ ಬಾರಿ ವಾಣಿಜ್ಯ ಬೆಳೆಗಳನ್ನು ಬೆಳೆದಿದ್ದಾರೆ. ಜಿಲ್ಲೆಗೆ ವಿಶೇಷ ಒತ್ತು ನೀಡಬೇಕು ಎಂದು ಕೃಷಿ ಸಚಿವರಿಗೆ ಮನವಿ ಮಾಡಿದರು.
ಸಂಸದರಾದ ಎಸ್ ಮುನಿಸ್ವಾಮಿ ಅವರು ಮಾತನಾಡಿ, ಸರ್ಕಾರದ ಯಾವುದೇ ಒಂದು ಯೋಜನೆ ಕೇವಲ ಕಛೇರಿಗೆ ಸೀಮಿತವಾಗದೆ ಅರ್ಹ ಫಲಾನುಭವಿಗೆ ತಲುಪಿದಾಗ ಯೋಜನೆಯು ಸಾರ್ಥಕವಾಗುತ್ತದೆ. ಜಿಲ್ಲೆಯ ಜನರು ಇತರೆ ಜಿಲ್ಲೆಯ ರೈತರಿಗೆ ಕೋಲಾರ ಜಿಲ್ಲೆಯ ರೈತರು ಮಾದರಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಯುವುದರಲ್ಲಿ ಸಂಶಯವಿಲ್ಲ ಎಂದರು.
ಇಡೀ ದೇಶದಲ್ಲಿಯೇ ಅತಿ ಹೆಚ್ಚು ಕೆರೆಗಳು ಕೋಲಾರ ಜಿಲ್ಲೆಯಲ್ಲಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೊಸ್ಕರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಈ ಎಲ್ಲಾ ಯೋಜನೆಗಳು ಸಹ ಸಂಪೂರ್ಣವಾಗಿ ಅರ್ಹ ಫಲಾನುಭವಿಗಳಿಗೆ ಸಿಗಬೇಕು ಎಂದರು.