ಬೆಳಗಾವಿ, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಇಂದು ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಆಪ್ತ ಎನ್ನಲಾಗಿರುವ ಗುರುಪಾದ ಕಳ್ಳಿ ಹಾಗೂ ಸುರೇಶ್ ಅಂಗಡಿ ಅಳಿಯ ಶಂಕರಗೌಡ ಪಾಟೀಲ್ ಅವರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿರುವ ಗುರುಪಾದ ಕಳ್ಳಿ ಎಂಬುವರ ಮನೆ ಮೇಲೆ ಏಕಾಏಕಿ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು, 87 ಸಾವಿರ ನಗದು, 200ಗ್ರಾಂ ಚಿನ್ನಾಭರಣವನ್ನು ವಶ ಪಡಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಇಂತಹವರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು, ದಾಖಲೆಯ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇನ್ನೂ ಮತ್ತೊಂದೆಡೆ ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಅಳಿಯ ಶಂಕರಗೌಡ ಪಾಟೀಲ್ ಅವರ ಮನೆಯ ಮೇಲೆಯೂ ದಾಳಿ ನಡೆಸಿದ್ದು, ಶಂಕರಗೌಡ ಪಾಟೀಲ್ ಪತ್ನಿಯ ಬಳಿಯಿದ್ದ 2 ಲಕ್ಷ ನಗದು, 300ಗ್ರಾಂ ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.