ಉಡುಪಿ, ಜ. 1 : ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರಾಧನೋತ್ಸವವನ್ನು ಜ. 9ರಂದು ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಮತ್ತು ಎಲ್ಲ ಶಾಖಾ ಮಠ, ಸಂಸ್ಥೆಗಳಲ್ಲಿ ನಡೆಸಲಾಗುತ್ತದೆ.
ಬೆಂಗಳೂರಿನಲ್ಲಿ ಸಾರ್ವಜನಿಕರ ದಟ್ಟಣೆಯನ್ನು ನಿಯಂತ್ರಿಸಲು ಕಷ್ಟವಾಗಬಹುದೆಂದು ಜ. 8ರಂದು ನ್ಯಾಶನಲ್ ಕಾಲೇಜು ಮೈದಾನದಲ್ಲಿ ಅನ್ನಸಂತರ್ಪಣೆ ನಡೆಸಲು ಚಿಂತನೆ ನಡೆಸಲಾಗುತ್ತಿದೆ. ಬೆಂಗಳೂರಿನ ಎರಡೂ ದಿನಗಳ ಕಾರ್ಯಕ್ರಮಗಳಲ್ಲಿ ನೂತನ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪಾಲ್ಗೊಳ್ಳಲು ಅನುಕೂಲವಾಗುವಂತೆ ಮತ್ತು ಶ್ರೀ ವಿಶ್ವೇಶತೀರ್ಥರು ಹರಿಪಾದ ಸೇರಿದ ವೇಳೆ ಸಹಕರಿಸಿದವರು, ಸರಕಾರಿ ಆಡಳಿತದೊಂದಿಗೆ ಸಮಾಲೋಚನೆ ನಡೆಸಿ ಕಾರ್ಯಕ್ರಮ ಯೋಜಿಸಲಾಗುತ್ತಿದೆ.