ಮಂಗಳೂರು, ಜು. 25: ತೀವ್ರ ಜ್ವರ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೇರಳ ಮೂಲದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಸಿಧ್ರಾತುಲ್ ಮುನ್ತಾಹ (8) ಮತ್ತು ಸೋದರಿ 6 ತಿಂಗಳ ಮಗು ಶಿನಾಜ್ ಮೃತ ಕಂದಮ್ಮಗಳು. ಇವರು ಸಿದ್ದಿಕ್ ಮತ್ತು ನಿಶಾ ದಂಪತಿಯ ಮಕ್ಕಳಾಗಿದ್ದು, ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದ ಮುನ್ತಾಹ ಮಂಗಳವಾರ ಮೃತಪಟ್ಟಿದ್ದಾನೆ. ಶಿನಾಜ್ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದ್ದಾಳೆ. ಮಕ್ಕಳ ತಾಯಿ ನಿಶಾ ಅದೇ ಆಸ್ಪತ್ರೆಯಲ್ಲಿ ಜ್ವರದಿಂದ ದಾಖಲಾಗಿದ್ದಾರೆ ಎಂದು ಕುಟುಂಬ ತಿಳಿಸಿದೆ.
ತಾಯಿಯ ಮನೆಯಲ್ಲಿದ್ದಾಗ ಮಕ್ಕಳು ಸೋಂಕಿಗೆ ಒಳಗಾಗಿರಬಹುದೆಂದು ವೈದ್ಯರು ಶಂಕಿಸಿದ್ದಾರೆ. ಜ್ವರಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಜಿಲ್ಲಾ ವೈದ್ಯಕೀಯ ಅಧಿಕಾರಿ ನೇತೃತ್ವದ ವೈದ್ಯರ ತಂಡ ಈ ಕುರಿತು ಪರಿಶೀಲನೆ ನಡೆಸುತ್ತಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಹೇಳಿದರು.