ಬೆಂಗಳೂರು: ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರೆ ಬಿಜೆಪಿ-ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಬಿಗ್ ಶಾಕ್ ಕೊಟ್ಟಿದ್ದಾರೆ.
ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್, ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ.ನಂಜುಂಡಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.
ವಿಧಾನಸಭೆಯಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಚುನಾಯಿತರಾಗಿರುವ ಕೆ.ಪಿ. ನಂಜುಂಡಿ ಅವರ ಪರಿಷತ್ ಸದಸ್ಯತ್ವ ಅವಧಿ ಜೂನ್ 17ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈವೇಳೆ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದಾಗ ನನ್ನನ್ನು ಎಂಎಲ್ಸಿ ಮಾಡಿ ಸುಮ್ಮನಾದ್ರು. ಏನೂ ಜವಾಬ್ದಾರಿ ಕೊಡಲಿಲ್ಲ. ರಾಜೀನಾಮೆ ಕೊಡುವಂತೆ ಎರಡು ವರ್ಷಗಳಿಂದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಲೆಯಿಲ್ಲದಂತಾಗಿದೆ. ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ.